Sunday, October 1, 2023

Latest Posts

ಹೋಂ ಐಸೋಲೇಷನ್‍ನಲ್ಲಿರುವವರಿಗೆ ವೈದ್ಯಕೀಯ ಕಿಟ್ ವಿತರಿಸಿ: ಸಚಿವ ಶ್ರೀನಿವಾಸ ಪೂಜಾರಿ

ಹೊಸದಿಗಂತ ವರದಿ, ಮಡಿಕೇರಿ:

ಜಿಲ್ಲೆಯಲ್ಲಿ ಕಳೆದ ಹತ್ತು ದಿನಗಳಿಂದ ಕೋವಿಡ್ ಪಾಸಿಟಿವಿಟಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕೋವಿಡ್ ನಿಯಂತ್ರಣಕ್ಕೆ ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಜೊತೆಗೆ ಹೋಂ ಐಸೋಲೇಷನ್‍ನಲ್ಲಿ ಇರುವವರಿಗೆ ವೈದ್ಯಕೀಯ ಕಿಟ್ ವಿತರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ನಿರ್ದೇಶನ ನೀಡಿದ್ದಾರೆ.
ಕೋವಿಡ್ ನಿಯಂತ್ರಣ ಸಂಬಂಧಿಸಿದಂತೆ ವಿಡಿಯೋ ಸಂವಾದ ಮೂಲಕ ಮಾಹಿತಿ ಪಡೆದು ಸಚಿವರು ಮಾತನಾಡಿದರು.
ಕೋವಿಡ್ ನಿಯಂತ್ರಣ ಸಂಬಂಧಿಸಿದಂತೆ ಎಲ್ಲಾ ಹಂತದ ಅಧಿಕಾರಿಗಳು ಕರ್ತವ್ಯ ಪ್ರಜ್ಞೆಯಿಂದ ಕಾರ್ಯ ನಿರ್ವಹಿಸಬೇಕು. ಗ್ರಾ.ಪಂ.ಮಟ್ಟದಲ್ಲಿ ಕಾರ್ಯಪಡೆಯನ್ನು ಕ್ರಿಯಾಶೀಲಗೊಳಿಸಬೇಕು. ಗ್ರಾಮ, ಶಾಲಾ, ಕಾಲೇಜುಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸಚಿವರು ಸೂಚಿಸಿದರು.
ಎರಡನೇ ಡೋಸ್ ಪಡೆದು ಒಂಬತ್ತು ತಿಂಗಳ ನಂತರ, ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಬೇಕು. ಹಾಗೆಯೇ 15 ರಿಂದ 18 ವರ್ಷದ ಎಲ್ಲಾ ಮಕ್ಕಳು ಕೋವಿಡ್ ನಿಯಂತ್ರಣ ಲಸಿಕೆ ನೀಡುವಲ್ಲಿ ಮೂರು ದಿನದೊಳಗೆ ಪ್ರಗತಿ ಸಾಧಿಸಬೇಕೆಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ವಾರಾಂತ್ಯ ಕರ್ಪ್ಯೂ ಸಂದರ್ಭದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಕೋವಿಡ್ ಪಾಸಿಟಿವ್ ಬಂದ ಪ್ರದೇಶಗಳಲ್ಲಿ ಕೋವಿಡ್ ನಿಯಮ ಪಾಲಿಸುವಲ್ಲಿ ಸ್ಥಳೀಯರಿಗೆ ಮನವರಿಕೆ ಮಾಡಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ನಿರ್ದೇಶನ ನೀಡಿದರು.
ಗಡಿಯಲ್ಲಿ ಬಿಗಿ ಕ್ರಮ: ಜಿಲ್ಲೆಯ ಗಡಿ ಪ್ರದೇಶದ ಚೆಕ್ ಪೋಸ್ಟ್’ಗಳಲ್ಲಿ ಬಿಗಿಕ್ರಮ ಕೈಗೊಳ್ಳಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕೋವಿಡ್ ನಿಯಂತ್ರಣಕ್ಕೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವರು ಹೇಳಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾಹಿತಿ ನೀಡಿ 15 ವರ್ಷ ಮೇಲ್ಪಟ್ಟವರೆಲ್ಲರೂ ಲಸಿಕೆ ಪಡೆಯುವಂತಾಗಲು ಪ್ರಯತ್ನಿಸಲಾಗುತ್ತಿದೆ. ವಾರಾಂತ್ಯ ಕರ್ಪ್ಯೂ ಸಂದರ್ಭದಲ್ಲಿ ತರಕಾರಿ, ಹಾಲು, ಹಣ್ಣು ಹಾಗೂ ದಿನಸಿ ಪದಾರ್ಥಗಳಲ್ಲಿ ಯಾವುದೇ ರೀತಿಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸಲಾಗಿದೆ ಎಂದು ಸಚಿವರ ಗಮನಕ್ಕೆ ತಂದರು.
ರೆಸಾರ್ಟ್ ಹಾಗೂ ಇತರೆ ಕಡೆಗಳಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಹೊರ ರಾಜ್ಯ ಹಾಗೂ ವಿದೇಶಗಳಿಂದ ಬರುವವರ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ. ಕುಟ್ಟ, ಮಾಕುಟ್ಟ ಗಡಿಭಾಗದ ಚೆಕ್‌ ಪೋಸ್ಟ್’ಗಳಲ್ಲಿ ಬರುವವರು 72 ಗಂಟೆ ಅವಧಿಯ ನೆಗಟಿವ್ ವರದಿ ನೀಡಬೇಕು ಎಂದರು.
ಶಾಲಾ-ಕಾಲೇಜುಗಳಲ್ಲಿ 2 ಅಥವಾ 3 ಪಾಸಿಟಿವಿಟಿ ಪ್ರಕರಣಗಳು ಕಂಡುಬಂದಲ್ಲಿ ಸ್ಯಾನಿಟೈಸರ್ ಮಾಡಲಾಗುತ್ತದೆ. ಕೋವಿಡ್ ನಿರ್ವಹಣೆ ಸಂಬಂಧಿಸಿದಂತೆ ಹಣದ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ನೋಡಲ್ ಅಧಿಕಾರಿಗಳ ನೇಮಕ: ಎರಡನೇ ಡೋಸ್ ಪಡೆದು ಒಂಬತ್ತು ತಿಂಗಳು ಪೂರ್ಣಗೊಂಡ ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತದೆ. ಪ್ರತೀ ಹೋಬಳಿ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ರ್ಯಾಂಡಮ್ ಆಗಿ ಪರಿಶೀಲಿಸಲಾಗುತ್ತದೆ ಎಂದು ಡಾ.ಬಿ.ಸಿ.ಸತೀಶ ಅವರು ಮಾಹಿತಿ ನೀಡಿದರು.
ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು ಗ್ರಾ.ಪಂ.ಮಟ್ಟದಲ್ಲಿನ ಕಾರ್ಯಪಡೆ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಕೊರೊನಾ ನಿಯಂತ್ರಿಸಲು ಅಗತ್ಯ ಮುನ್ನೆಚ್ಚರಿಕೆ ವಹಿಸುವಲ್ಲಿ ಕ್ರಮವಹಿಸಲಾಗಿದೆ ಎಂದು ಸಚಿವರ ಗಮನಕ್ಕೆ ತಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರು ಕೋವಿಡ್ ನಿಯಂತ್ರಣ ಸಂಬಂಧ ಸರ್ಕಾರದ ನಿಯಮದಂತೆ ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಗಡಿ ಭಾಗದ ಚೆಕ್‌ ಪೋಸ್ಟ್’ಗಳಲ್ಲಿ ನಿಯಮಾನುಸಾರ ಕರ್ತವ್ಯ ನಿರ್ವಹಿಸಲಾಗುತ್ತಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ಕೋವಿಡ್ ನಿಯಂತ್ರಣ ಸಂಬಂಧ ಅಗತ್ಯ ಮುನ್ನೆಚ್ಚರಿಕಾ ಕ್ರಮವಹಿಸಿದೆ. ಔಷಧಿ ದಾಸ್ತಾನು ಇದ್ದು, ಲಸಿಕಾ ಕಾರ್ಯಕ್ರಮ ಪ್ರಗತಿ ಸಾಧಿಸಲಾಗುವುದು ಎಂದು ಮಾಹಿತಿ ನೀಡಿದರು.
ಎರಡನೇ ಡೋಸ್ ಪಡೆದು ಒಂಬತ್ತು ತಿಂಗಳು ಪೂರ್ಣಗೊಂಡ ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತದೆ. ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸೂಕ್ಷ್ಮಾಣು ಜೀವಿ ವಿಭಾಗದಲ್ಲಿ ತಜ್ಞರ ಕೊರತೆ ಇದೆ ಎಂದು ಸಚಿವರ ಗಮನಕ್ಕೆ ತಂದರು.
ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಕಾರ್ಯಪ್ಪ, ಕೊಡಗು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ವಿಶಾಲ್ ಕುಮಾರ್, ನೋಡಲ್ ಅಧಿಕಾರಿಗಳಾದ ಪಿ.ಶ್ರೀನಿವಾಸ್, ಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮುದ್ದಣ್ಣ, ಹಿರಿಯ ಭೂ ವಿಜ್ಞಾನಿ ಶ್ರೀನಿವಾಸ್ ಮತ್ತಿತರರು ಹಲವು ಮಾಹಿತಿ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!