ದಿಗಂತ ವರದಿ ಕುಶಾಲನವರ:
ಕುಶಾಲನಗರ ತಾಲೂಕು ವ್ಯಾಪ್ತಿಯ ಕೂಡಿಗೆ ಕೃಷಿ ಕ್ಷೇತ್ರದ ಆವರಣದಲ್ಲಿರುವ ಕೂಡಿಗೆ ಸರಕಾರಿ ಪದವಿ ಪೂರ್ವ ಕಾಲೇಜು ಜಾಗದ ಹಕ್ಕು ಪತ್ರವನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಹಾಗೂ ಪ್ರಾಂಶುಪಾಲರಿಗೆ ವಿತರಿಸಿದರು.
ಕುಶಾಲನಗರದಲ್ಲಿ ನಡೆದ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರಕಾರದ ನಿಯಮನುಸಾರ ಜಿಲ್ಲೆಯ ಎಲ್ಲಾ ಸರಕಾರಿ ಶಾಲೆ ಮತ್ತು ಕಾಲೇಜುಗಳ ಜಾಗದ ದಾಖಲೆಗೆ ಅನುಗುಣವಾಗಿ ಹಕ್ಕು ಪತ್ರಗಳನ್ನು ವಿತರಣೆ ಮಾಡಲು ಈಗಾಗಲೇ ಜಿಲ್ಲಾಡಳಿತ ಕ್ರಮವಹಿಸಿದೆ. ಅದರಂತೆ ಕುಶಾಲನಗರ ತಾಲೂಕಿನ ಕೂಡಿಗೆ ಪದವಿ ಪೂರ್ವ ಕಾಲೇಜಿನ ಜಾಗದ ಹಕ್ಕು ಪತ್ರವನ್ನು ವಿತರಣೆ ಮಾಡಲಾಗಿದೆ. ಇದು ಕಾಲೇಜಿನ ಪ್ರಗತಿಗೆ ಪೂರಕವಾಗಲಿದೆ. ಆಡಳಿತ ಮಂಡಳಿಯು ತಡೆಗೋಡೆ ನಿರ್ಮಾಣ ಮಾಡಬೇಕು. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಕಾರ ನೀಡಬೇಕು ಎಂದು ಹೇಳಿದರು.
ಈ ಸಂದರ್ಭ ಕುಶಾಲನಗರ ಪಟ್ಟಣ ಪಂಚಾಯತಿ ಅಧ್ಯಕ್ಷ ಜಯವರ್ಧನ್, ಕುಶಾಲನಗರ ತಾಲೂಕು ತಹಶೀಲ್ದಾರ್ ಪ್ರಕಾಶ್, ಕೂಡುಮಂಗಳೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ರಮೇಶ್, ಎಪಿಸಿಎಂಎಸ್ ಅಧ್ಯಕ್ಷ ಕೊಮಾರಪ್ಪ, ಕೂಡಿಗೆ ಪದವಿ ಪೂರ್ವ ಕಾಲೇಜಿನ ಉಪಾಧ್ಯಕ್ಷ ಕೆ.ಕೆ.ನಾಗರಾಜಶೆಟ್ಟಿ ಪ್ರಾಂಶುಪಾಲ ಡಾ.ಬಸಪ್ಪ, ಉಪನ್ಯಾಸಕ ನಾಗಪ್ಪ ಮತ್ತಿತರರು ಇದ್ದರು.