ಹೊಸದಿಗಂತ ವರದಿ ಕುಶಾಲನಗರ:
ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ವೀರಾಜಪೇಟೆಯ ಸೆಂಟ್ ಆನ್ಸ್ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 10ಕ್ಕೂ ಅಧಿಕ ಕ್ರೀಡೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆಯುವ ಮೂಲಕ ಕೂಡಿಗೆಯ ಸರಕಾರಿ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.
ಬಾಲಕರ ಮತ್ತು ಬಾಲಕಿಯರ ವಿಭಾಗದ 5 ಸಾವಿರ ಮೀಟರ್ ಓಟ, 1,500 ಮೀಟರ್ ಓಟ, ಎತ್ತರ ಜಿಗಿತ, ಉದ್ದ ಜಿಗಿತ, ಟ್ರಿಪಲ್ ಜೆಂಪ್, ತಟ್ಟೆ ಎಸೆತ, 800 ಮತ್ತು400, ಮೀಟರ್ ಓಟ, 400×4 ಮೀಟರ್ ರೀಲೆ, 100×4 ಮೀಟರ್ ರೀಲೆ ಸೇರಿದಂತೆ ವಿವಿಧ ಮೇಲಾಟಗಳಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಡಿ.17 ರಂದು ಮಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ಕೆ.ನಾಗರಾಜ ಶೆಟ್ಟಿ, ಪ್ರಾಂಶುಪಾಲ ಡಾ. ಬಸಪ್ಪ ಹಾಗೂ ಉಪನ್ಯಾಸಕರ ವೃಂದದವರು ಅಭಿನಂದಿಸಿದ್ದಾರೆ. ವಿದ್ಯಾರ್ಥಿಗಳಿಗೆ ಉಪನ್ಯಾಸಕರಾದ ಕಾವೇರಮ್ಮ ಹಾಗೂ ರಮೇಶ್ ತರಬೇತಿ ನೀಡಿದ್ದರು.