ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿನಿಮಾ ಮತ್ತು ಭಕ್ತಿ ಎರಡನ್ನೂ ಸಮನಾಗಿ ಪಾಲಿಸುವ ‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ, ಇತ್ತೀಚೆಗೆ ಕುಟುಂಬ ಸಮೇತರಾಗಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ.
ಪ್ರಸ್ತುತ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ ‘ಕಾಂತಾರ: ಚಾಪ್ಟರ್ 1’ ಚಿತ್ರದ ಪ್ರಿ-ಪ್ರೊಡಕ್ಷನ್ ಮತ್ತು ಚಿತ್ರೀಕರಣದ ಕೆಲಸಗಳಲ್ಲಿ ರಿಷಬ್ ಶೆಟ್ಟಿ ತೀವ್ರ ಬ್ಯುಸಿಯಾಗಿದ್ದಾರೆ. ಎಷ್ಟೇ ಕೆಲಸದ ಒತ್ತಡವಿದ್ದರೂ, ರಿಷಬ್ ಅವರು ತಮ್ಮ ಕುಟುಂಬಕ್ಕಾಗಿ ಸಮಯ ಮೀಸಲಿಡುವುದನ್ನು ಮರೆಯುವುದಿಲ್ಲ. ಪತ್ನಿ ಪ್ರಗತಿ ಶೆಟ್ಟಿ ಹಾಗೂ ಮಕ್ಕಳೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಅವರು, ತಾಯಿ ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ರಿಷಬ್ ಶೆಟ್ಟಿ ಅವರಿಗೆ ದೈವ ಮತ್ತು ದೇವರ ಮೇಲೆ ಅಪಾರ ನಂಬಿಕೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಈ ಹಿಂದೆಯೂ ಹಲವು ಬಾರಿ ಅವರು ಕೊಲ್ಲೂರಿಗೆ ಭೇಟಿ ನೀಡಿ ಶ್ರದ್ಧಾಭಕ್ತಿ ಪ್ರದರ್ಶಿಸಿದ್ದರು. ‘ಕಾಂತಾರ’ ಚಿತ್ರದ ಭರ್ಜರಿ ಯಶಸ್ಸಿನ ನಂತರ ಅವರ ಜವಾಬ್ದಾರಿ ಹೆಚ್ಚಾಗಿದ್ದು, ಮುಂದಿನ ಸಿನಿಮಾದ ಯಶಸ್ಸಿಗಾಗಿ ತಾಯಿಯ ಮೊರೆ ಹೋಗಿದ್ದಾರೆ. ದೇವಸ್ಥಾನದಲ್ಲಿ ರಿಷಬ್ ಅವರನ್ನು ಕಂಡ ಅಭಿಮಾನಿಗಳು ಅವರ ಸರಳತೆಗೆ ಫಿದಾ ಆಗಿದ್ದಾರೆ.



