ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತಾದ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ಈ ಗೊಂದಲದ ನಡುವೆಯೇ ಮಾಜಿ ಸಚಿವ ಕೆ.ಎನ್. ರಾಜಣ್ಣ ನೀಡಿರುವ ಹೊಸ ಹೇಳಿಕೆಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಇತ್ತೀಚೆಗೆ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜಣ್ಣ, ಕಾಂಗ್ರೆಸ್ ಪಕ್ಷದ ಆಂತರಿಕ ವಿದ್ಯಮಾನಗಳ ಬಗ್ಗೆ ನೇರವಾದ ಮಾತುಗಳನ್ನಾಡಿದ್ದಾರೆ. “ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿಯಾಗಲು ಅರ್ಹತೆ ಇರುವ ಕನಿಷ್ಠ ಒಂದು ಡಜನ್ ನಾಯಕರಿದ್ದಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ” ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.
ಸಿಎಂ ಬದಲಾವಣೆಯ ಬಗ್ಗೆ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡಿದ ಅವರು, “ಮುಖ್ಯಮಂತ್ರಿಗಳು ಬದಲಾಗುತ್ತಾರೆ ಎಂದು ನಾನು ಹೇಳುವುದಿಲ್ಲ, ಹಾಗೆಯೇ ಅವರೇ ಮುಂದುವರಿಯುತ್ತಾರೆ ಎಂದೂ ಖಚಿತವಾಗಿ ಹೇಳಲಾರೆ. ಆದರೆ, ಈ ಗೊಂದಲಕ್ಕೆ ಕಾಂಗ್ರೆಸ್ ಹೈಕಮಾಂಡ್ ಶೀಘ್ರವೇ ಒಂದು ತಾರ್ಕಿಕ ಅಂತ್ಯ ಹಾಡಬೇಕು. ಅನಿಶ್ಚಿತತೆ ಮುಂದುವರಿದರೆ ಅದು ಸರ್ಕಾರ ಮತ್ತು ಪಕ್ಷದ ವರ್ಚಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ” ಎಂದು ಎಚ್ಚರಿಸಿದರು.
ಸಿದ್ದರಾಮಯ್ಯ ಅವರೇ ಪೂರ್ಣಾವಧಿಗೆ ಮುಂದುವರಿಯಲಿ ಅಥವಾ ಬದಲಾವಣೆಯ ಅಗತ್ಯವಿದ್ದರೆ ಅದನ್ನು ಸ್ಪಷ್ಟಪಡಿಸಲಿ, ಒಟ್ಟಿನಲ್ಲಿ ವರಿಷ್ಠರು ಜಾಗರೂಕ ಹಾಗೂ ಸ್ಪಷ್ಟ ನಿರ್ಧಾರವನ್ನು ಅತಿ ಶೀಘ್ರವಾಗಿ ತೆಗೆದುಕೊಳ್ಳಬೇಕು ಎಂಬುದು ರಾಜಣ್ಣ ಅವರ ಆಗ್ರಹವಾಗಿದೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶೀಘ್ರದಲ್ಲೇ ‘ಶುಭಸುದ್ದಿ’ ಸಿಗಲಿದೆ ಎಂಬ ಅವರ ಬೆಂಬಲಿಗರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿದ ರಾಜಣ್ಣ, “ಜೀವನದಲ್ಲಿ ಆಶಾವಾದಿಯಾಗಿರುವುದು ತಪ್ಪಲ್ಲ. ಡಿ.ಕೆ. ಶಿವಕುಮಾರ್ ಅವರು ನಮ್ಮ ಪಕ್ಷದ ಅಧ್ಯಕ್ಷರು, ಅವರಿಗೆ ಮುಖ್ಯಮಂತ್ರಿ ಆಗಬೇಕೆಂಬ ಹಂಬಲ ಇರುವುದು ಸಹಜ ಮತ್ತು ಅದು ಹೆಚ್ಚಾಗಿಯೇ ಇದೆ. ಆದರೆ ನಮ್ಮಲ್ಲಿ ಕೇವಲ ಒಬ್ಬರೇ ಆಕಾಂಕ್ಷಿಗಳಿಲ್ಲ. ಮಲ್ಲಿಕಾರ್ಜುನ ಖರ್ಗೆ, ಡಾ. ಜಿ. ಪರಮೇಶ್ವರ್, ಎಂ.ಬಿ. ಪಾಟೀಲ್ ಅವರಂತಹ ಸಮರ್ಥ ನಾಯಕರ ದಂಡೇ ಇದೆ” ಎಂದು ನೆನಪಿಸಿದರು.



