ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಕಾಂಗ್ರೆಸ್ ನಿಂದ ವಿಧಾನಸಭಾ ಚುನಾವಣೆಗಾಗಿ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಇದೀಗ ಅರ್ಜಿ ಸಲ್ಲಿಸಿದವರು ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗುವುದಾಗಿ ಹೇಳಿಕೊಂಡು ಓಡಾಡುತ್ತಿದ್ದರು.
ಈ ಬಗ್ಗೆ ಅಸಮಾಧಾನಗೊಂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ , ಖಡಕ್ ವಾರ್ನಿಂಗ್ ಒಂದನ್ನು ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ವತಿಯಿಂದ ಸ್ಪರ್ಧಿಸಲು ಅರ್ಜಿ ಸಲ್ಲಿಸಿರುವ ಆಕಾಂಕ್ಷಿಗಳಿಗೆ ಪತ್ರ ಬರೆದಿರುವ ಅವರು, ಕಾಂಗ್ರೆಸ್ ನಿಂತ ಟಿಕೆಟ್ ಕೋರಿ ಅರ್ಜಿಯನ್ನು ಹಲವಾರು ಆಕಾಂಕ್ಷಿಗಳು ಸಲ್ಲಿಸಿದ್ದಾರೆ. ಈ ಬಗ್ಗೆ ಪಕ್ಷದ ಹೈಕಮಾಂಡ್, ಕೆಲವೊಂದು ಮಾನದಂಡಗಳ ಅನುಸಾರ ಅಭ್ಯರ್ಥಿಯ ಆಯ್ಕೆ ಮಾಡಲಿದೆ ಎಂದಿದ್ದಾರೆ.
ಇನ್ನೂ ಇದರ ನಡುವೆಯೂ ಕೆಲವೆಡೆ ಪಕ್ಷದ ಅರ್ಜಿ ಸಲ್ಲಿಸಿರುವ ಆಕಾಂಕ್ಷಿಗಳು ತಮ್ಮದೇ ಗುಂಪು ಕಟ್ಟಿಕೊಂಡು ಕೆಲಸ ಮಾಡುತ್ತಿರುವುದು, ಪತ್ರಿಕಾ ಹೇಳಿಕೆ ನೀಡಿ, ತಾವೇ ಮುಂದಿನ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುವುದು, ಮುಂತಾದ ಜನರಲ್ಲಿ ಗೊಂದಲ ಮೂಡಿಸುವ ವಿಚಾರಗಳು ಎಐಸಿಸಿ ಮತ್ತು ಕೆಪಿಸಿಸಿ ಗಮನಕ್ಕೆ ಬಂದಿದೆ ಎಂದಿದ್ದಾರೆ.
ಈ ಹಿನ್ನಲೆಯಲ್ಲಿ ಪಕ್ಷದ ಅನುಮತಿ ಪಡೆಯದೇ ಯಾವುದೇ ಹೇಳಿಕೆಗಳನ್ನು ನೀಡಬಾರದು. ಕಾರ್ಯಕರ್ತರು ಮತ್ತು ಸಾರ್ವಜನಿಕರಲ್ಲಿ ಯಾವುದೇ ಗೊಂದಲ ಉಂಟಾಗುವಂತಹ ಸನ್ನಿವೇಶಗಳನ್ನು ನಿರ್ಮಿಸಬಾರದು ಎಂಬುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಪಕ್ಷದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿರುವ ಆಕಾಂಕ್ಷಿಗಳು ತಪ್ಪದೇ ಪ್ರತಿ ಕ್ಷೇತ್ರದ ಎಲ್ಲರೊಂದಿಗೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆ ಮತ್ತು ಬಲವರ್ಧನೆ ಮಾಡಬೇಕು. ಪ್ರತಿಯೊಂದು ವಿಧಾನಸಭಾ ಕ್ಷೇತ್ರದಿಂದ ಅರ್ಜಿ ಸಲ್ಲಿಸಿರುವ ಎಲ್ಲಾ ಆಕಾಂಕ್ಷಿಗಳೊಂದಿಗೆ ಒಗ್ಗೂಡಿ ಪ್ರತಿಯೊಂದು ಬೂತ್ ಗಳಿಗೆ ತೆರಳಿ, ಬಿಜೆಪಿ ಆಡಳಿತದ ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡುವ ಕೆಲಸ ಮಾಡಬೇಕು ಎಂದು ಸೂಚಿಸಿದ್ದಾರೆ.