May 16, 2026
Saturday, May 16, 2026
spot_img

ಬಿಡದಿ ಟೌನ್‌ಶಿಪ್ ವಿವಾದ | ನನ್ನ ಮೇಲೆ ಕಲ್ಲೆಸೆದರೂ ಹೆದರಲ್ಲ : ಕುಮಾರಸ್ವಾಮಿಗೆ ಡಿಕೆಶಿ ತಿರುಗೇಟು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬಿದದಿ ಟೌನ್‌ಶಿಪ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ,ಕೆ ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿ, ಇದು ಕುಮಾರಸ್ವಾಮಿ ಅವಧಿಯಲ್ಲೇ ಆರಂಭವಾದ ಯೋಜನೆಯಾಗಿದ್ದು, ನಾವು ಅದನ್ನು ಮುಂದುವರಿಸುತ್ತಿರುವುದಾಗಿ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ನಮ್ಮನ್ನು ಟೀಕಿಸದೆ ಕುಮಾರಸ್ವಾಮಿಗೆ ರಾಜಕೀಯವಾಗಿ ಉಳಿಗಾಲವಿಲ್ಲ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಹೆಚ್ಚಿನ ರೈತರು ಈ ಯೋಜನೆಗೆ ಒಪ್ಪಿಗೆ ನೀಡಿಲ್ಲ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ (GBIT) ಯೋಜನೆಗೆ ಜಮೀನು ನೀಡುತ್ತಿರುವ ರೈತರೊಂದಿಗೆ ಕೇಂದ್ರ ಸಚಿವರು ಸಂವಾದ ನಡೆಸಬಹುದು. ರೈತರನ್ನು ಭೇಟಿ ಮಾಡಲು ದಿನಾಂಕ ನಿಗದಿಪಡಿಸುವುದಾಗಿ ತಿಳಿಸಿದ್ದಾರೆ.

ರೈತರು ನನ್ನ ಮೇಲೆ ಕಲ್ಲು ಎಸೆಯಬಹುದು ಅಥವಾ ನನ್ನ ವಿರುದ್ಧ ಘೋಷಣೆಗಳನ್ನು ಕೂಗಬಹುದು. ಅದಕ್ಕೆ ನಾನು ಹೆದರಬೇಕೇ? ಅವರ ಭವಿಷ್ಯ, ಅವರ ಮಕ್ಕಳ ಭವಿಷ್ಯ ಮತ್ತು ಅವರ ಭೂಮಿಯ ಭವಿಷ್ಯ ಮುಖ್ಯ. ಇಂದಿನಿಂದ ಇಪ್ಪತ್ತು ವರ್ಷಗಳ ನಂತರ, ಬಿಡದಿ ಮತ್ತು ದಕ್ಷಿಣ ಬೆಂಗಳೂರಿನ ಜನರು ನನ್ನನ್ನು ನೆನಪಿಸಿಕೊಳ್ಳುತ್ತಾರೆ,” ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ಅವರೇ ಈ ಯೋಜನೆಯ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಬಹುದಿತ್ತಲ್ಲವೇ? ಅವರು ಏಕೆ ಮಾಡಲಿಲ್ಲ? ನಾನು ಅದನ್ನು ಡಿನೋಟಿಫಿಕೇಷನ್ ಮಾಡಲು ಸಿದ್ಧನಿಲ್ಲ. ಭೂಮಿ ಡಿನೋಟಿಫಿಕೇಷನ್ ಮಾಡಿದ ನಂತರ ಅವರು ಏನನ್ನೆಲ್ಲಾ ಎದುರಿಸಿದರು ಎಂಬುದು ಅವರಿಗೆ ಚೆನ್ನಾಗಿ ತಿಳಿದಿದೆ. ಯಡಿಯೂರಪ್ಪ ಅವರಿಗೂ ಗೊತ್ತು, ನನಗೂ ಗೊತ್ತು,” ಎಂದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !