ಹೊಸದಿಗಂತ ವರದಿ, ಕಲಬುರಗಿ
ಬ್ರಹ್ಮಾಂಡ್ ಭ್ರಷ್ಟಾಚಾರದಲ್ಲಿ ಮುಳುಗೆದ್ದ ಕಾಂಗ್ರೆಸ್ ದೇಶದಲ್ಲಿ ಹೇಳ ಹೆಸರಿಲ್ಲದಂತೆ ಮಾಯವಾಗುತ್ತಿದೆ ಎಂದು ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ದಿನದಲ್ಲಿ ಭಾರತ ಭ್ರಷ್ಟಾಚಾರದಲ್ಲಿ ನಂಬರ್ 1 ದೇಶವಾಗುತ್ತದೆ ಎಂಬ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿದರು.
ದೇಶದಲ್ಲಿ ಎಷ್ಟು ಸಾಧ್ಯವೋ ಅಷ್ಟು ಭ್ರಷ್ಟಾಚಾರ ಮಾಡಿ ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದೆ. ಕಾಂಗ್ರೆಸ್ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದನ್ನು ನೋಡದೆ, ಇನ್ನೋಬ್ಬರ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಖರ್ಗೆ ಬಿಡಬೇಕು ಎಂದು ವಾಗ್ದಾಳಿ ನಡೆಸಿದರು.
ಪ್ರಿಯಾಂಕ್ ಖಗೆ೯ ಇದೇ ರೀತಿ ಹೇಳಿಕೆ ಕೊಡುತ್ತಾ ಹೋದರೆ, ಮುಂದಿನ ದಿನಗಳಲ್ಲಿ ಕಲಬುರಗಿಯಲ್ಲಿ ಗೆಲುವಿನ ಆಸೆಯನ್ನು ಕೈ ಬಿಡಬೇಕು ಎಂದು ಹೇಳಿದರು. ಸಿದ್ದರಾಮೋತ್ಸವ ಕಾರ್ಯಕ್ರಮದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಪಕ್ಷದವರಿಗೆ ಮಾಡುವುದಕ್ಕೆ ಬೇರೆ ಉತ್ಸವಗಳಿಲ್ಲ. ಹೀಗಾಗಿ ಸಿದ್ದರಾಮೋತ್ಸವ ಮಾಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಡಿಕೆಶಿ ಉತ್ಸವ ನಡೆದರೂ ನಡೆಯಬಹುದು ಎಂದು ವ್ಯಂಗ್ಯವಾಡಿದರು.
ನಾವು ಅಭಿವೃದ್ಧಿ ಪರ್ವದ ಉತ್ಸವ ಮಾಡುತ್ತೇವೆ. ಅವರು ತಮ್ಮ ನಾಯಕರ ಉತ್ಸವ ಮಾಡಿ ಮತ್ತಷ್ಟು ವಿನಾಶದ ಅಂಚಿನೆಡೆ ತಲುಪುತ್ತಿದ್ದಾರೆ ಎಂದು ಹೇಳಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ