ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವದ ಬದಲಾವಣೆಯ ಚರ್ಚೆಗಳು ಈಗ ಬಹಿರಂಗ ಸಂಘರ್ಷಕ್ಕೆ ನಾಂದಿ ಹಾಡಿವೆ.
ಅಸ್ಸಾಂ ಚುನಾವಣಾ ಉಸ್ತುವಾರಿಯ ನೆಪದಲ್ಲಿ ದೆಹಲಿಗೆ ಹಾರಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಮೂಲಕ ತಮ್ಮ ರಾಜಕೀಯ ದಾಳ ಉರುಳಿಸಿದ್ದಾರೆ. ವಿಶೇಷವೆಂದರೆ, ದೆಹಲಿಗೆ ಕಾಲಿಡುತ್ತಿದ್ದಂತೆಯೇ ‘136’ (ಕಾಂಗ್ರೆಸ್ ಗೆದ್ದ ಸೀಟುಗಳ ಸಂಖ್ಯೆ) ಎಂಬ ಸಂಖ್ಯೆಯನ್ನು ಉಲ್ಲೇಖಿಸುವ ಮೂಲಕ ತಮ್ಮ ಸಂಘಟನಾ ಶಕ್ತಿಯನ್ನು ಹೈಕಮಾಂಡ್ ಮುಂದೆ ಪರೋಕ್ಷವಾಗಿ ಪ್ರದರ್ಶಿಸಿದ್ದಾರೆ.
ಇತ್ತ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಳಿತದ ಮೇಲೆ ಹಿಡಿತ ಸಾಧಿಸುವ ಪ್ರಯತ್ನ ಮುಂದುವರಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಅನುಪಸ್ಥಿತಿಯಲ್ಲೇ ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಇಲಾಖೆಗಳ ಬಜೆಟ್ ಸಭೆ ನಡೆಸುವ ಮೂಲಕ ತಮ್ಮ ಕೆಲಸ ತಾವು ಮಾಡುವುದಾಗಿ ಸಂದೇಶ ರವಾನಿಸಿದ್ದಾರೆ. “ನಾನು ಹೈಕಮಾಂಡ್ ನಿರ್ಧಾರಕ್ಕೆ ಬದ್ಧ” ಎನ್ನುತ್ತಲೇ ಸಿದ್ದರಾಮಯ್ಯ ಅಳೆದು ತೂಗಿ ಮಾತನಾಡುತ್ತಿದ್ದಾರೆ.
ಇದನ್ನೂ ಓದಿ:
ಇದೇ ವೇಳೆ, ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗಳಿಗೆ ಪರೋಕ್ಷವಾಗಿ ಟಾಂಗ್ ನೀಡಿರುವ ಡಿ.ಕೆ. ಶಿವಕುಮಾರ್, “ಬೇಜವಾಬ್ದಾರಿ ಹೇಳಿಕೆಗಳಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ. ಒಟ್ಟಿನಲ್ಲಿ, ರಾಜ್ಯದ ಆಡಳಿತಾರೂಢ ಪಕ್ಷದ ಈ ‘ಕುರ್ಚಿ ಕಾಳಗ’ ಈಗ ಸಂಪೂರ್ಣವಾಗಿ ದೆಹಲಿಯ ಅಂಗಳಕ್ಕೆ ಶಿಫ್ಟ್ ಆಗಿದೆ.



