ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಅಧಿಕಾರಕ್ಕೇರಿದ ಕಾಂಗ್ರೆಸ್ ದಿನ ಕಳೆದಂತೆ ಒಂದು ಒಂದು ರೀತಿಯಲ್ಲೂ ತಮ್ಮ ಡ್ಯಾಮೇಜ್ ಕಂಟ್ರೋಲ್ ಮಾಡುತ್ತಿದ್ದು, ಈ ಮೂಲಕ ಎಲ್ಲವೂ ಸರಿಯಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಬೊಮ್ಮಾಯಿ, ಪಕ್ಷದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ನೀಡಿರುವ ಹೇಳಿಕೆಯಿಂದ ಆಗಿರುವ ಡ್ಯಾಮೆಜ್ ಕಂಟ್ರೋಲ್ ಮಾಡಲು ಡಿಸಿಎಂ ಡಿ.ಕೆ.ಶಿವಕುಮಾರ್, ಸಿಂಗಾಪುರ ಕಾರ್ಯತಂತ್ರದ ಕಥೆ ಕಟ್ಟಿದ್ದಾರೆ. ಈ ಮೂಲಕ ಮುಂದೆ ತಾವೇ ಮಾಡುವ ಕಾರ್ಯತಂತ್ರದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಟಾಂಗ್ ನೀಡಿದರು.
ಪಕ್ಷದಲ್ಲಿ ಡಿ ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆಯೇ ಭಿನ್ನಾಭಿಪ್ರಾಯ ಇದೆ. ಶಾಸಕರೇ ಸರಕಾರದ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ ಎಂದರು.
ಗ್ಯಾರಂಟಿ ಯೋಜನೆಗಳಿಗೆ ಹಣ ನೀಡುವ ಸಲುವಾಗಿ ಅಭಿವೃದ್ಧಿಗೆ ಅನುದಾನ ಇಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದು ಸ್ಪಷ್ಟವಾಗಿದೆ. ಶಾಸಕರೇ ಈ ಬಗ್ಗೆ ಬಹಿರಂಗವಾಗಿಯೇ ಹೇಳಿದ್ದಾರೆ. ಈಗ ಸಚಿವರುಗಳ ವಿರುದ್ದ ಶಾಸಕರು ಅಸಮಾಧಾನ ಹೊರ ಹಾಕಿ ಪತ್ರ ಬರೆದಿದ್ದಾರೆ. ಒಟ್ಟಾರೆ ಸರ್ಕಾರಕ್ಕೆ ಬಾಲಗ್ರಹ ಪೀಡೆ ಶುರುವಾಗಿದೆ ಎಂದರು.