ಹೊಸದಿಗಂತ ಡಿಜಿಟಲ್ ಡೆಸ್ಕ್;
ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತೀಯ ಸೇನೆ ದಿಟ್ಟವಾಗಿ ಪ್ರತ್ಯತ್ತರ ನೀಡುತ್ತಿದೆ. ಈ ಮಧ್ಯೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ರಾಷ್ಟ್ರೀಯ ಭದ್ರತೆ ಹಿತಾಸಕ್ತಿ ಹಿನ್ನೆಲೆಯಲ್ಲಿ ಎಲ್ಲ ಮಾಧ್ಯಮ ಸಂಸ್ಥೆಗಳಿಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಈ ವೇಳೆ ರಕ್ಷಣಾ ಕಾರ್ಯಾಚರಣೆ, ಸೇನೆಯ ಚಲನವಲನಗಳ ನೇರಪ್ರಸಾರ ಮಾಡದಂತೆ ಸಲಹೆ ನೀಡಿದೆ.
ರಾಷ್ಟ್ರದ ಹಿತದೃಷ್ಟಿಯಿಂದ ಎಲ್ಲ ಮಾಧ್ಯಮಗಳು, ಸುದ್ದಿಸಂಸ್ಥೆಗಳು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಭದ್ರತೆಗೆ ಸಂಬಂಧಿತ ಕಾರ್ಯಾಚರಣೆಗಳನ್ನು ವರದಿ ಮಾಡುವಾಗ ಅತ್ಯಂತ ಜವಾಬ್ದಾರಿಯುತವಾಗಿ ವರ್ತಿಸಬೇಕು ಮತ್ತು ಅಸ್ತಿತ್ವದಲ್ಲಿರುವ ಕಾನೂನುಗಳು ಮತ್ತು ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಸಚಿವಾಲಯ ತಿಳಿಸಿದೆ.
ಸೂಕ್ಷ್ಮ ಮಾಹಿತಿಯನ್ನು ಬಹಿರಂಗಪಡಿಸುವುದು ವಿರೋಧಿಗಳಿಗೆ ಅನುಕೂಲ ಒದಗಿಸಿದಂತಾಗುತ್ತದೆ. ಇದು ಕಾರ್ಯಾಚರಣೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವುದಲ್ಲದೆ ಭದ್ರತಾ ಸಿಬ್ಬಂದಿಯ ಸುರಕ್ಷತೆಗೆ ಅಪಾಯವನ್ನುಂಟು ಮಾಡುತ್ತದೆ ಎಂದು ವಿವರಿಸಿದೆ.
ಈ ವೇಳೆ ಕಾರ್ಗಿಲ್ ಯುದ್ಧ, 26/11 ಮುಂಬೈ ಭಯೋತ್ಪಾದಕ ದಾಳಿ ಮತ್ತು ಕಂದಹಾರ್ ಅಪಹರಣ ಸೇರಿದಂತೆ ಕೆಲವು ಘಟನೆಗಳಲ್ಲಿ ಅನಿರ್ಬಂಧಿತ ನೇರ ಪ್ರಸಾರವು ರಾಷ್ಟ್ರೀಯ ಹಿತಾಸಕ್ತಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಸಚಿವಾಲಯ ನೆನಪಿಸಿಕೊಂಡಿದೆ.
ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸುವಲ್ಲಿ ಮಾಧ್ಯಮ, ಡಿಜಿಟಲ್ ಫ್ಯಾಟ್ಫಾರ್ಮ್ ಮತ್ತು ವ್ಯಕ್ತಿಗಳು ಪ್ರಮುಖ ಪಾತ್ರ ವಹಿಸುತ್ತಾರೆ. ಕಾನೂನು ಬಾಧ್ಯತೆಗಳ ಹೊರತಾಗಿ ನಾವು ನಡೆಸುವ ಕ್ರಮಗಳು ನಡೆಯುತ್ತಿರುವ ಕಾರ್ಯಾಚರಣೆಗಳು ಅಥವಾ ನಮ್ಮ ಪಡೆಗಳ ಭದ್ರತೆ ಪಡೆಗಳ ಕಾರ್ಯ ವೈಖರಿ ಜತೆಗೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು ಎಂದಿದೆ.