ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಆಡುವ ಬಣ್ಣದ ಮಾತುಗಳಿಗೆ ಮರುಳಾಗಬೇಡಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕರೆ ನೀಡಿದ್ದಾರೆ.
ಉತ್ತರಾಖಂಡ ದ ರಾಮನಗರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ದೇಶದ ನೈಜ ಸಮಸ್ಯೆಗಳ ಮೇಲೆ ಚುನಾವಣೆ ನಡೆಯಬೇಕೆ ಹೊರತು ಖಾಲಿ ಭಾಷಣಗಳ ಮೇಲಲ್ಲ ಎಂದರು.
ಮೋದಿ ಅವರು ತಮ್ಮ ಭಾಷಣದಲ್ಲಿ ಬಳಸುವ ಪದಗಳಿಗೆ ಮರುಗಳಾಗಬೇಡಿ. ಮತ ಚಲಾಯಿಸುವ ಮುನ್ನ ಮೋದಿ ಸರ್ಕಾರದ 10 ವರ್ಷಗಳ ಆಡಳಿತದಲ್ಲಿ ನಿಮ್ಮ ಜೀವನದಲ್ಲಿ ನಿಜವಾಗಿಯೂ ಸಕಾರಾತ್ಮಕ ಬದಲಾವಣೆ ತಂದಿದೆಯೇ? ಎಂದು ನಿಮ್ಮನ್ನೇ ನೀವು ಪ್ರಾಮಾಣಿಕವಾಗಿ ಕೇಳಿಕೊಳ್ಳಿ’ ಎಂದು ಹೇಳಿದರು.
ಕಳೆದ ಚುನಾವಣೆಯಲ್ಲಿ ಜನರಿಗೆ ನೀಡಿದ ಅನೇಕ ಭರವಸೆಗಳನ್ನು ಮೋದಿ ಸರ್ಕಾರ ಈಡೇರಿಸಿಲ್ಲ. 2 ಕೋಟಿ ಉದ್ಯೋಗ ಸೃಷ್ಟಿ, ದೇಶದ ಪ್ರತಿಯೊಬ್ಬ ನಾಗರಿಕನ ಬ್ಯಾಂಕ್ ಖಾತೆಗೆ 15 ಲಕ್ಷ ಜಮೆ ಮಾಡುವ ಭರವಸೆಗಳು ಹಾಗೆ ಉಳಿದಿವೆ. ಅಲ್ಲದೇ ಮತಕ್ಕಾಗಿ ಬಿಜೆಪಿಯವರು ಧರ್ಮವನ್ನೂ ಎಳೆದು ತರುತ್ತಿದ್ದಾರೆ ಎಂದು ಕಿಡಿಕಾರಿದರು.