ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದು ಸಾವು ಆದರೂ ಅದನ್ನು ಸಹಿಸುವುದಿಲ್ಲ. 26 ಮಂದಿ ಪ್ರವಾಸಿಗರ ಸಾವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಭಯೋತ್ಪಾದಕರು ಹಾಗೂ ಅದನ್ನು ಬೆಂಬಲಿಸುವವರಿಗೆ ತಕ್ಕ ಶಾಸ್ತಿ ಮಾಡದೇ ಭಾರತ ಸರ್ಕಾರ ವಿರಮಿಸುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಕೆ ನೀಡಿದ್ದಾರೆ.
ದೇಶದಲ್ಲಿ ಮೊದಲಿದ್ದ ಭಯೋತ್ಪಾದಕ ಚಟುವಟಿಕೆಯನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸ್ತಬ್ಧಗೊಳಿಸಿತ್ತು. ಈಗ ಮತ್ತೆ ಅದು ಗರಿಗೆದರಿದೆ. ನಮ್ಮ ಜನರಿಗೆ ಯಾರು ನೋವು ಕೊಟ್ಟಿದ್ದಾರೊ ಅವರಿಗೆ ಭಾರತ ಸರ್ಕಾರ ತಕ್ಕ ಶಾಸ್ತಿ ಮಾಡಲಿದೆ ಎಂದರು.
ಕಾಶ್ಮೀರದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ಸೇರಿದಂತೆ ಕೇಂದ್ರದ ಸುಧಾರಣಾ ಕ್ರಮಗಳನ್ನು ಸಹಿಸದೇ ಅದಕ್ಕೆ ಕೊಳ್ಳಿ ಇಡಲು ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ನಡೆಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಪಕ್ಷ–ಪಂಗಡ, ಜಾತಿ, ಧರ್ಮ ಮೀರಿ ಒಗ್ಗಟ್ಟಾಗಿ ಈ ಪರಿಸ್ಥಿತಿಯನ್ನು ಎದುರಿಸಿ ದೇಶದಲ್ಲಿ ಭಯೋತ್ಪಾದನೆಗೆ ಇತಿಶ್ರೀ ಹಾಡಬೇಕಿದೆ ಎಂದು ಹೇಳಿದರು.