April 6, 2026
Monday, April 6, 2026
spot_img

ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಚುನಾವಣಾ ಕಣದಲ್ಲಿ ಬಿಜೆಪಿ ನಾಯಕರ ಹೇಳಿಕೆಗಳು ಕೀಳುಮಟ್ಟದಿಂದ ಕೂಡಿದ್ದು, ದ್ವೇಷದ ರಾಜಕಾರಣಕ್ಕೆ ಸಾಕ್ಷಿಯಾಗಿವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ನಾಯಕ ಪ್ರತಾಪ್ ಸಿಂಹ ಬಳಸಿದ ಅಸಭ್ಯ ಪದಗಳ ಬಗ್ಗೆ ಕಿಡಿಕಾರಿದ ಮುಖ್ಯಮಂತ್ರಿಗಳು, ಪ್ರಚಾರದ ವೇಳೆ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ್ದ ವಿವಾದಾತ್ಮಕ ಹೇಳಿಕೆಗಳನ್ನು ಕಟುವಾಗಿ ಖಂಡಿಸಿದರು. “ನಾನು ಮುಖ್ಯಮಂತ್ರಿಯಾದರೆ ಮಹಿಳೆಯರಿಗೆ 3,000 ರೂ. ನೀಡುತ್ತೇನೆ ಹಾಗೂ ಅಕ್ರಮ ಮಸೀದಿಗಳನ್ನು ಬುಲ್ಡೋಜರ್ ಮೂಲಕ ತೆರವುಗೊಳಿಸುತ್ತೇನೆ” ಎಂಬ ಯತ್ನಾಳ್ ಹೇಳಿಕೆಯು ಸಾಮಾನ್ಯ ಜ್ಞಾನಕ್ಕೆ ವಿರುದ್ಧವಾಗಿದೆ. ಇಂತಹ ಮಾತುಗಳು ಒಬ್ಬ ಜವಾಬ್ದಾರಿಯುತ ರಾಜಕಾರಣಿಗೆ ಶೋಭಿಸುವುದಿಲ್ಲ ಎಂದು ಟೀಕಿಸಿದರು.

“ಭಾರತದ ಜನಸಂಖ್ಯೆಯಲ್ಲಿ ಮುಸಲ್ಮಾನರು ದೊಡ್ಡ ಪಾಲನ್ನು ಹೊಂದಿದ್ದಾರೆ. ಅವರನ್ನು ದೇಶದಿಂದ ಹೊರಹಾಕಲು ಯಾರಿಂದಲೂ ಸಾಧ್ಯವಿಲ್ಲ. ದ್ವೇಷದ ರಾಜಕಾರಣವನ್ನು ನಾವು ಎಂದಿಗೂ ಸಹಿಸುವುದಿಲ್ಲ” ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಮತ್ತು ಸಾಮಾಜಿಕ ಬದ್ಧತೆಯೇ ನಮ್ಮ ಶ್ರೀರಕ್ಷೆ. ಇವುಗಳ ಆಧಾರದ ಮೇಲೆ ನಾವು ಜನರ ಬಳಿ ಮತ ಕೇಳುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !