ಹೊಸದಿಗಂತ ವರದಿ,ಮಡಿಕೇರಿ:
ವನ್ಯ ಪ್ರಾಣಿಗಳಿಂದ ತಯಾರಿಸಿದ ವಸ್ತುಗಳ ಬಳಕೆಗೆ ಇರುವ ನಿಷೇಧದ ಬಗ್ಗೆ ಕೊಡಗಿನ ಜನತೆಗೆ ಆತಂಕ ಬೇಡ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅಭಯ ನೀಡಿದ್ದಾರೆ.
ಬೆಂಗಳೂರಿನ ವಿಧಾನ ಸಭೆಯ ಮೊಗಶಾಲೆಯಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅರಣ್ಯ ಇಲಾಖೆಯು ಇಂತಹ ವಸ್ತುಗಳನ್ನು ಹಿಂದುರಿಗಸಲು ದಿನ ನಿಗದಿಪಡಿಸಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಗಮನಿಸಿದ್ದು, ಇದರಿಂದ ಕೊಡಗಿನ ಜನತೆಗೆ ತೊಂದರೆಯಾಗಲಿದೆ. ಕೊಡಗಿನಲ್ಲಿ ಪಾರಂಪರಿಕವಾಗಿ ಮತ್ತು ಸಾಂಪ್ರಾದಾಯಿಕವಾಗಿ ಐನ್’ಮನೆಗಳಲ್ಲಿ, ದೇವಸ್ಥಾನಗಳಲ್ಲಿ ಹಾಗೂ ಪೀಚೆ ಕತ್ತಿ ಮುಂತಾದ ಆಭರಣಗಳಲ್ಲಿ ತಲತಲಾಂತರದಿಂದ ವನ್ಯ ಜೀವಿಯ ಉತ್ಪನ್ನಗಳನ್ನು ಬಳಕೆ ಮಾಡಲಾಗಿದೆ. ಇವುಗಳ ರಕ್ಷಣೆಯ ಜವಾಬ್ದಾರಿ ತಮ್ಮ ಮೇಲಿದ್ದು, ವಿಚಾರವನ್ನು ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರ ಗಮನಕ್ಕೆ ತರಲಾಗಿದೆ. ಸರ್ಕಾರದ ಮಟ್ಟದಲ್ಲಿ ಪರಿಹಾರ ಸಿಗದೇ ಇದ್ದಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಪರಿಹಾರ ಒದಗಿಸಲು ತಾವು ಬದ್ಧರಿದ್ದು ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಭರವಸೆ ನೀಡಿದರು.