June 21, 2026
Sunday, June 21, 2026
spot_img

ಡಾ. ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಗೆ ನಾಡಪ್ರಭು ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿ

ಹೊಸದಿಗಂತ ವರದಿ ಚಿತ್ರದುರ್ಗ:

ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ನೀಡಲಾಗುವ ಅಂತರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿಗಳ ಪೈಕಿ ಈ ಭಾರಿ ಚಿತ್ರದುರ್ಗದ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಡಾ.ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸ್ವಾಮೀಜಿಗಳ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆ, ಪರಿಸರ ಕಾಳಜಿ, ಯುವಜನ ಸಬಲೀಕರಣ, ಸಮಸಮಾಜದ ನಿರ್ಮಾಣ ಹಾಗೂ ರಾಷ್ಟ್ರೀಯತೆಯ ಸೇವಾ ಕಾರ್ಯಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಿರುವುದಾಗಿ ಪ್ರತಿಷ್ಠಾನ ತಿಳಿಸಿದೆ. ಈ ಸಂಬಂಧ ಪ್ರತಿಷ್ಠಾನದ ಪದಾಧಿಕಾರಿಗಳು ಸ್ವಾಮೀಜಿಯವರನ್ನು ಚಿತ್ರದುರ್ಗದ ಶ್ರೀಮಠದಲ್ಲಿ ಭೇಟಿ ನೀಡಿ ಅಧಿಕೃತ ಆಹ್ವಾನ ನೀಡಿ ಸಮಾರಂಭದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಸ್ವೀಕರಿಸುವಂತೆ ಮನವಿ ಮಾಡಿದರು.

ನಾಡಪ್ರಭು ಕೆಂಪೇಗೌಡರ ಆದರ್ಶಗಳನ್ನು ಸಮಾಜದಲ್ಲಿ ಬೆಳೆಸುವ ಉದ್ದೇಶದಿಂದ ಪ್ರತಿವರ್ಷ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಈ ಪ್ರಶಸ್ತಿಗಳನ್ನು ನೀಡಿ ಗೌರವಿಸುವ ಸಂಪ್ರದಾಯವನ್ನು ಕೆಂಪೇಗೌಡ ಪ್ರತಿಷ್ಠಾನ ರೂಡಿಸಿಕೊಂಡು ಬರುತ್ತಿದೆ. ಈ ಸಾಲಿನಲ್ಲಿ ಡಾ.ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರ ಆಯ್ಕೆ ಭಕ್ತರು ಹಾಗೂ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.
ನಾಡಪ್ರಭು ಕೆಂಪೇಗೌಡರ 517 ನೇ ಜನ್ಮ ಜಯಂತಿ ಪ್ರಯುಕ್ತ ಜೂನ್ 27 ರಂದು ಶನಿವಾರ ಬೆಂಗಳೂರಿನ ವಿಶ್ವ ವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ಪ್ರಶಸ್ತಿ ನೀಡಿ ಗೌರವಿಸುವರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !