ಹೊಸದಿಗಂತ ,ವಿಜಯಪುರ:
ವಿಜಯಪುರ ನಗರದ ತೊರವಿ ಬಳಿಯ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಜ್ಞಾನಶಕ್ತಿ ಆವರಣದಲ್ಲಿ ಸೋಮವಾರ ಹಮ್ಮಿಕೊಂಡ ವಿಶ್ವವಿದ್ಯಾನಿಲಯದ 15 ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಕಲಬುರ್ಗಿಯ ಶರಣಬಸವೇಶ್ವರ ವಿವಿ ಸಂಘದ ಅಧ್ಯಕ್ಷೆ ಡಾ.ದ್ರಾಕ್ಷಾಯಣಿ ಅಪ್ಪ ಅವರಿಗೆ ಗೌರವ ಡಾಕ್ಟರೇಟ್ ನೀಡಿದರು.
ಇದೇ ಸಂದರ್ಭ ಮಹಿಳಾ ವಿಶ್ವವಿದ್ಯಾನಿಲಯದಿಂದ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್ ಗಳಲ್ಲಿ ಗರಿಷ್ಠ ಅಂಕಗಳನ್ನು ಗಳಿಸಿ ಉತ್ತೀರ್ಣರಾದ ಒಟ್ಟು 77 ವಿದ್ಯಾರ್ಥಿನಿಯರಿಗೆ 80 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು.
ಅಲ್ಲದೆ ಒಟ್ಟು 12,347 ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಪದವಿ ಪಡೆದಿದ್ದು, ಇನ್ನು ಒಟ್ಟು 48 ವಿದ್ಯಾರ್ಥಿನಿಯರಿಗೆ ಪಿಎಚ್ಡಿ ಪದವಿ ಪ್ರದಾನ ಮಾಡಲಾಗಿದ್ದು, ಒಟ್ಟು 1,107 ವಿದ್ಯಾರ್ಥಿನಿಯರಿಗೆ ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ವಿತರಿಸಲಾಯಿತು.
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಮಹಿಳಾ ವಿವಿ ಕುಲಪತಿ ಪ್ರೊ.ಬಿ.ಕೆ. ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಖರ, ಪ್ರೊ.ಓಂಕಾರ ಕಾಕಡೆ ಇದ್ದರು.