ಹೊಸ ದಿಗಂತ ವರದಿ, ಯಲ್ಲಾಪುರ :
ರಾಜ್ಯದ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಡಾ.ಕೆ.ಕಸ್ತೂರಿ ರಂಗನ್ ವರದಿಯನ್ನು ಸಮಗ್ರ ಪರಿಶೀಲನೆ ನಡೆಸದೇ ಜಾರಿಗೊಳಿಸುವುದಿಲ್ಲ ಎಂದು ಮರು ಹೇಳಿಕೆ ನೀಡಿರುವುದನ್ನು ಶಾಸಕ ಶಿವರಾಮ ಹೆಬ್ಬಾರ ಸ್ವಾಗತಿಸಿದ್ದಾರೆ.
ಈ ಹಿಂದೆ ಅರಣ್ಯ ಸಚಿವರು ಈ ವರದಿ ಜಾರಿಗೆ ರಾಜ್ಯ ಸರಕಾರ ಬದ್ಧವಾಗಿದೆ ಎಂದು ಹೇಳಿಕೆ ನೀಡುವ ಮೂಲಕವಾಗಿ ವರದಿ ಅನುಷ್ಠಾನಗೊಳಿಸುವ ಬಗ್ಗೆ ಸುಳಿವು ನೀಡಿದ್ದರು.
ಈ ವರದಿಯ ಅನುಷ್ಠಾನಕ್ಕೆ ನಾನು ವಿರೋಧ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ನೀಡಿದ ನಂತರ ಅರಣ್ಯ ಸಚಿವರು ಸೂಕ್ತ ಪರಿಶೀಲನೆ ನಡೆಸದೆ ತರಾತುರಿಯಲ್ಲಿ ಡಾ.ಕೆ.ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸುವುದಿಲ್ಲ ಎಂದು ಮರು ಹೇಳಿಕೆ ನೀಡಿದ್ದಾರೆ.
ಪಶ್ಚಿಮ ಘಟ್ಟಗಳ ಪ್ರದೇಶಗಳನ್ನು ಒಳಪಡುವ ಶಾಸಕರು ಹಾಗೂ ಸಂಸದರನ್ನು ಒಳಗೊಂಡ ವಿಶೇಷ ಸಮಿತಿಯನ್ನು ರಚಿಸಿ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ವಾಸಿಸುವ ಸಹಸ್ರಾರು ಬಡವರ ಜೀವನವನ್ನು ದುಸ್ತಿರಗೊಳಿಸುವ ಈ ವರದಿಯ ಸಾಧಕ – ಭಾದಕಗಳ ಕುರಿತು ಕೂಲಂಕುಷವಾಗಿ ಚರ್ಚಿಸಿ ಮುಂದಿನ ನಿರ್ಧಾರವನ್ನು ಕೈಗೊಳ್ಳುವಂತೆ ಸರಕಾರಕ್ಕೆ ಆಗ್ರಹಿಸುತ್ತೇನೆ ಎಂದಿದ್ದಾರೆ.