ಹೊಸದಿಗಂತ ವರದಿ ದಾವಣಗೆರೆ:
ವಿಪರೀತ ಮದ್ಯ ಸೇವನೆಯ ಬಳಿಕ ನಡೆದ ಜಗಳ ವಿಕೋಪಕ್ಕೆ ತಿರುಗಿ, ಮಹಿಳೆಯೊಬ್ಬರು ಸೀರೆಯಿಂದ ಕತ್ತು ಬಿಗಿದು ಪ್ರಿಯಕರನನ್ನು ಹತ್ಯೆಗೈದಿರುವ ಘಟನೆ ತಾಲೂಕಿನ ನಾಗಮ್ಮ ಕೇಶವಮೂರ್ತಿ ಬಡಾವಣೆಯಲ್ಲಿ ನಡೆದಿದೆ.
ಹತ್ಯೆಯಾದ ವ್ಯಕ್ತಿಯನ್ನು ದಾವಣಗೆರೆಯ ಮಂಜಪ್ಪ (40) ಎಂದು ಗುರುತಿಸಲಾಗಿದೆ.
ಪತ್ನಿ ಹಾಗೂ ಮಕ್ಕಳಿಂದ ದೂರವಾಗಿದ್ದ ಮಂಜಪ್ಪ, ಪತಿಯಿಂದ ವಿಚ್ಛೇದನ ಪಡೆದಿದ್ದ ಶಬೀನಾ (38) ಎಂಬ ಮಹಿಳೆಯೊಂದಿಗೆ ಕಳೆದ ಆರು ವರ್ಷಗಳಿಂದ ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ:
ಇಬ್ಬರೂ ಮದ್ಯ ಸೇವಿಸಿದ ಬಳಿಕ ಕ್ಷುಲ್ಲಕ ವಿಚಾರಕ್ಕೆ ಮಾತಿನ ಚಕಮಕಿ ಆರಂಭವಾಗಿದ್ದು, ಬಳಿಕ ಜಗಳ ತೀವ್ರಗೊಂಡಿದೆ. ಈ ವೇಳೆ ಶಬೀನಾ ತಾನು ಉಟ್ಟಿದ್ದ ಸೀರೆಯಿಂದ ಮಂಜಪ್ಪನ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮಂಜಪ್ಪನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಶಬೀನಾಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.



