ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಠ್ಯಪರಿಷ್ಕರಣೆಗಿಳಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಟೀಕಾಪ್ರಹಾರ ನಡೆಸಿದೆ. ಬಿಜೆಪಿ ಸರಕಾರದ ಅವಧಿಯಲ್ಲಿ ಶಿಕ್ಷಣ ಸಚಿವರಾಗಿ ಕೆಲಸ ಮಾಡಿದ ಎಲ್ಲ ಮಾಜಿ ಶಿಕ್ಷಣ ಸಚಿವರು, ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿ ಮೇಲ್ಮನೆ ಸದಸ್ಯರಾಗಿ ಕೆಲಸ ಮಾಡುತ್ತಿರುವ ಸದಸ್ಯರು ಒಟ್ಟು ಸೇರಿ ಸಭೆ ನಡೆಸಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರವಾಗಿ ಅವಲೋಕನ ಮಾಡದೆ, ಸಾಧಕ ಬಾಧಕ ಅಧ್ಯಯನ ಮಾಡದೆ, ರಾಜಕೀಯ ಕಾರಣಕ್ಕಾಗಿ ಪೂರ್ವಾಗ್ರಹಪೀಡಿತರಾಗಿ ಕೊಟ್ಟಿರುವ ಪಠ್ಯ ಪರಿಷ್ಕರಣೆ ಕುರಿತ ಹೇಳಿಕೆ ಅಸಹಿಷ್ಣು ಭಾವನೆಯಿಂದ ಕೂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟೀಕಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸಭೆಯ ಬಳಿಕ ಮಾತನಾಡಿದ ಅವರು, ಕೆಲವು ಮಹನೀಯರ ಪಾಠವನ್ನು ಕೈಬಿಡಬೇಕು ಎಂಬ ಹೇಳಿಕೆ ಕುರಿತು ಸಮಗ್ರವಾಗಿ ಚರ್ಚಿಸಲಾಗಿದೆ ಎಂದರು. ಶಿಕ್ಷಣ ಕ್ಷೇತ್ರವು ಪೂರ್ವಾಗ್ರಹಪೀಡಿತ ಮನಸ್ಥಿತಿಯಿಂದ ಹೊರಬರಬೇಕು. ಉತ್ತಮ ನಾಗರಿಕರನ್ನು ಶಿಕ್ಷಣ ತಯಾರು ಮಾಡಬೇಕು ಎಂಬ ಕಿವಿಮಾತನ್ನು ಹೇಳಿದರು.
ಸಮಾನಮನಸ್ಕರ ಸಭೆ ನಡೆಸಿ ಸಲಹೆಗಳನ್ನು ಪಡೆಯಲಾಗುವುದು. ಅದರ ಬಳಿಕ ಮುಂದಿನ ರೂಪುರೇಷೆ ನಿರ್ಧರಿಸಲಾಗುತ್ತದೆ ಎಂದರು.
ಮಾಜಿ ಸಚಿವ ಬಿ.ಸಿ.ನಾಗೇಶ್ ಅವರು ಮಾತನಾಡಿ, ದ್ವೇಷದಿಂದ ವರ್ತಿಸುತ್ತಿರುವುದು ಸರಿಯಲ್ಲ. ಎನ್ಸಿಇಆರ್ಟಿ ಸೂಚನೆ ಮೇರೆಗೆ ನಾವು ಹಿಂದೆ ಬದಲಾವಣೆ ಮಾಡಿದ್ದೆವು ಎಂದು ಸ್ಪಷ್ಟಪಡಿಸಿದರು.
ತಪ್ಪುಗಳನ್ನು ಸರಿಪಡಿಸುವ ಉದ್ದೇಶ ನಮ್ಮದಾಗಿತ್ತು. ಈಗ ದ್ವೇಷದಿಂದ ಬದಲಾವಣೆ ಮಾಡಿದರೆ ಅದರಿಂದ ಮಕ್ಕಳು, ಪೋಷಕರ ಮೇಲೆ ದುಷ್ಪರಿಣಾಮ ಬೀರಲಿದೆ. ಬದಲಾವಣೆ ಮಾಡುವುದಿದ್ದರೆ ಪೋಷಕರ ಗಮನಕ್ಕೆ ತಂದು ಮಾಡಬೇಕು ಎಂದು ಒತ್ತಾಯಿಸಿದರು.