ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಹೋದರಿಯ ಪತಿ ಹಾಗೂ ಬೆಳಗಾವಿ ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಬುಧವಾರ ಮುಂಜಾನೆ 5:30ಕ್ಕೆ ಬೆಳಗಾವಿಯ ಟಿವಿ ಸೆಂಟರ್ನಲ್ಲಿರುವ ಮಂಜುನಾಥ್ ಅವರ ನಿವಾಸಕ್ಕೆ ಲಗ್ಗೆ ಇಟ್ಟ ಬೆಂಗಳೂರು ಮತ್ತು ಗೋವಾ ಇ.ಡಿ ಅಧಿಕಾರಿಗಳ ಜಂಟಿ ತಂಡ, ಇಡೀ ರಾತ್ರಿ ಕಾರ್ಯಾಚರಣೆ ನಡೆಸಿದೆ. ಅಧಿಕಾರಿಗಳು ನಿನ್ನೆಯಿಂದ ಮನೆ ಬಿಟ್ಟು ಹೊರಗೆ ಬಂದಿಲ್ಲ.
ಉಪಹಾರ, ಊಟ ಎಲ್ಲವನ್ನೂ ಮನೆಗೆ ತರಿಸಿಕೊಂಡು ಬಿಡುವಿಲ್ಲದಂತೆ ಶೋಧ ಕಾರ್ಯ ನಡೆಸಲಾಗುತ್ತಿದೆ. ಮಂಜುನಾಥ್ ಹಾಗೂ ಕುಟುಂಬದ ಎಲ್ಲಾ ಸದಸ್ಯರು ಮನೆಯಲ್ಲಿಯೇ ಇದ್ದಾರೆ ಎಂದು ತಿಳಿದುಬಂದಿದೆ. ಒಟ್ಟಾರೆ 10 ಕಡೆಗಳಲ್ಲಿ ಅರೆಸೇನಾ ಪಡೆಗಳ ಬಿಗಿ ಭದ್ರತೆಯೊಂದಿಗೆ ಈ ಬೃಹತ್ ದಾಳಿ ನಡೆದಿದೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಸಮ್ಮಿಟ್ ಅಪಾರ್ಟ್ಮೆಂಟ್ನಲ್ಲಿದ್ದ ವೈ. ಮಂಜುನಾಥ್ ಅವರನ್ನು ಅಧಿಕಾರಿಗಳು ಈಗಾಗಲೇ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.



