ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಟ್ಕಾಯಿನ್ ಹಗರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೂ ತೀವ್ರತೆ ಹೆಚ್ಚಾಗಿದೆ. ಜಾರಿ ನಿರ್ದೇಶನಾಲಯದ ದಾಳಿಯನ್ನು ಆಧರಿಸಿಕೊಂಡು ಬಿಜೆಪಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು, ‘ಭ್ರಷ್ಟಾಚಾರವೇ ಕಾಂಗ್ರೆಸ್ನ ನಿಜವಾದ ಗ್ಯಾರಂಟಿ’ ಎಂದು ಆರೋಪಿಸಿದೆ.
ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಹಾಗೂ ಅವರ ಕುಟುಂಬಕ್ಕೆ ಸಂಬಂಧಿಸಿದ ಸ್ಥಳಗಳಲ್ಲಿ ನಡೆದ ಇಡಿ ದಾಳಿ, ಸರ್ಕಾರದ ನಿಜ ಮುಖವನ್ನು ಬಹಿರಂಗಪಡಿಸಿದೆ ಎಂದು ಹೇಳಿದೆ. ಬಿಟ್ಕಾಯಿನ್ ಹಗರಣದಲ್ಲಿ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜೊತೆಗಿನ ಹಣಕಾಸು ವ್ಯವಹಾರಗಳು ರಾಜ್ಯದ ಜನತೆಗೆ ದೊಡ್ಡ ದ್ರೋಹ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ:
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಗುರಿಯಾಗಿಸಿಕೊಂಡ ಬಿಜೆಪಿ, ತಮ್ಮ ಪಕ್ಷದ ಶಾಸಕರ ವಿರುದ್ಧದ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದೆ. ಹಗರಣದ ವಿಚಾರದಲ್ಲಿ ಸರ್ಕಾರದ ನಿಲುವು ಏನು ಎಂಬ ಪ್ರಶ್ನೆಯನ್ನೂ ಎತ್ತಿದೆ.
ಇದನ್ನೊಳಗೊಂಡಂತೆ, ಇಡಿ ಅಧಿಕಾರಿಗಳು ಬೆಳಗಿನ ಜಾವವೇ ಹಲವು ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು, ಹ್ಯಾರಿಸ್ ನಿವಾಸ ಸೇರಿದಂತೆ ಒಟ್ಟು 17 ಸ್ಥಳಗಳಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ. ಕ್ರಿಪ್ಟೋ ವ್ಯವಹಾರಗಳಿಗೆ ಸಂಬಂಧಿಸಿದ ಕಂಪನಿಗಳು ಹಾಗೂ ಕಚೇರಿಗಳಲ್ಲೂ ದಾಖಲೆ ಪರಿಶೀಲನೆ ನಡೆಯುತ್ತಿದೆ.
ತನಿಖೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಪ್ರಕರಣ ಇನ್ನಷ್ಟು ರಾಜಕೀಯ ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಇದೆ.



