ಹೊಸ ದಿಗಂತ ವರದಿ, ಚಿಕ್ಕಮಗಳೂರು:
ಶೈಕ್ಷಣಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಡಾ. ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಸೇವೆ ಅವಿಸ್ಮರಣೀಯ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ರಾಜಶೇಖರ್ ಹೇಳಿದರು.
ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ 77ನೇ ಜನ್ಮದಿನ ಆಚರಣೆ ಸಮಾರಂಭದಲ್ಲಿ ಸ್ವಾಮೀಜಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಬಾಲ ಗಂಗಾಧರನಾಥ ಸ್ವಾಮೀಜಿಯವರು ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೂ ಶೈಕ್ಷಣಿಕ ಕೇಂದ್ರಗಳನ್ನು ಸ್ಥಾಪಿಸಿ ಭವಿಷ್ಯವನ್ನು ರೂಪಿಸಿಕೊಳ್ಳಲು ದಾರಿ ಮಾಡಿಕೊಟ್ಟಿದ್ದಾರೆ. ಮುಖ್ಯವಾಗಿ ಸಂಸ್ಕೃತಿ, ಆಚಾರ ವಿಚಾರಗಳನ್ನು ಬಿತ್ತುವ ಮೂಲಕ ಸಮಾಜ ಸೇವೆಯೊಂದಿಗೆ ಸದಾ ಅಜರಾಮರಾಗಿದ್ದಾರೆ ಎಂದರು.
ಸಂಘದ ಗೌರವ ಕಾರ್ಯದರ್ಶಿ ಎಂ.ಸಿ. ಪ್ರಕಾಶ್ ಮಾತನಾಡಿ ಬಾಲಗಂಗಾಧರನಾಥ ಸ್ವಾಮೀಜಿಗಳ ಅವಿಸ್ಮರಣೀಯ ಸೇವೆಯನ್ನು ಪರಿಗಣಿಸಿ ಸರ್ಕಾರವು ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.
ಈ ವೇಳೆ ಉಪಾಧ್ಯಕ್ಷರಾದ ಎನ್.ಲಕ್ಷ್ಮಣ್ ಗೌಡ, ನಿರ್ದೇಶಕರಾದ ಕೆ.ಬಿ.ಅನಂತೇಗೌಡ, ಕಳವಾಸೆ ರವಿ, ಹೆಚ್.ಎನ್.ಕೃಷ್ಣೇಗೌಡ, ಮನುಕುಮಾರ್, ಹೆಚ್.ಎಂ.ಶ್ಯಾಮ್ ಮತ್ತಿತರರು ಇದ್ದರು.