ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ರಾಮೀಣ ಪ್ರದೇಶದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆಗೆ ರಾಜ್ಯ ಮಟ್ಟದಲ್ಲಿ ಏಜೆನ್ಸಿ ನೇಮಕಕ್ಕೆ ಇಲಾಖೆಯಿಂದ ಪ್ರಯತ್ನ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಹಿರೇಕೆರೂರು ಶಾಸಕ ಯು.ಬಿ. ಬಣಕಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಶಾಸಕರು, ಸಂಸದರು ಸೇರಿದಂತೆ ಸಾಮಾಜಿಕ ಹೊಣೆಗಾರಿಕೆ ಅನುದಾನದಲ್ಲಿ ಬಹಳಷ್ಟು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಿ, ಗ್ರಾಮ ಪಂಚಾಯತ್ಗಳಿಗೆ ಹಸ್ತಾಂತರಿಸಲಾಗಿದೆ. ನಿರ್ವಹಣೆ ಅವಧಿ ಮುಗಿದ ನಂತರ ಇವುಗಳ ನಿರ್ವಹಣೆಗೆ ತೊಂದರೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಪ್ರತಿಷ್ಠಿತ ಕುಡಿಯುವ ನೀರಿನ ಘಟಕಗಳ ತಯಾರಿಕಾ ಕಂಪನಿಗಳಲ್ಲಿ ಒಬ್ಬರಿಗೆ ನಿರ್ವಹಣೆ ಗುತ್ತಿಗೆ ನೀಡಲು ಕೋರಲಾಗಿದೆ. ಆದರೆ ಯಾವುದೇ ಕಂಪನಿಗಳು ನಿರ್ವಹಣೆ ಮಾಡಲು ಮುಂದೆ ಬರುತ್ತಿಲ್ಲ. ಸರ್ಕಾರ ತನ್ನ ಪ್ರಯತ್ನವನ್ನು ಮುಂದುವರಿಸಿದ್ದು, ಶೀಘ್ರದಲ್ಲಿಯೇ ಈ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.
ಹಾವೇರಿ ಜಿಲ್ಲೆಯಿಂದ ರೂ.6 ಕೋಟಿ ಮೊತ್ತದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲು ಮಂಜೂರಾತಿ ಕೋರಿ ಇಲಾಖೆಗೆ ಪ್ರಸ್ತಾವನೆ ಬಂದಿದೆ. ಈ ಪ್ರಸ್ತಾವನೆ ಪರಿಶೀಲನೆ ಹಂತದಲ್ಲಿದ್ದು, ಸದ್ಯದಲ್ಲಿಯೇ ಮಂಜೂರಾತಿ ನೀಡುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಹಾವೇರಿ ಜಿಲ್ಲೆಯ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಬರುವ 685 ಗ್ರಾಮಗಳ ಕುಡಿಯುವ ನೀರಿನ ಗುಣಮಟ್ಟದ ಪರಿಶೀಲನೆ ನಡೆಸಲಾಗಿದೆ. ಈ ಪೈಕಿ ಹಾವೇರಿ ತಾಲೂಕಿನ ಬೆಳವಿಗಿ, ಮರಡೂರ, ತೆರೆದಹಳ್ಳಿ, ಗುಯಿಲಗುಂದಿ, ಮೇವುಂಡಿ, ಗೂಡೂರು, ಮರೋಳ, ದೇವಗಿರಿ ಹಾಗೂ ಶಿಗ್ಗಾಂವ್ ತಾಲೂಕಿನ ಕಂಕಣವಾಡ ಗ್ರಾಮಗಳ ಮಾದರಿಯಲ್ಲಿ ಫ್ಲೋರೈಡ್ ಅಂಶ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಹಾವೇರಿ ತಾಲೂಕಿನ 8 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆ ಮೂಲಕ ಮೇಲ್ಮೈ ನೀರನ್ನು ಒದಗಿಸಲಾಗುತ್ತಿದೆ. ಈ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಅಳವಡಿಸಲಾಗಿದೆ. ಕಂಕಣವಾಡಿ ಗ್ರಾಮದಲ್ಲಿ ಪರ್ಯಾಯ ಕೊಳವೆಬಾವಿ ನೀರು ಮತ್ತು ಪಕ್ಕದ ಹನುಮರಹಳ್ಳಿ ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಹೇಳಿದರು.

