ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರದ ನರೇಂದ್ರ ಮೋದಿ ಸರ್ಕಾರ ತರುತ್ತಿರುವ ವಿದ್ಯುತ್ ಕಾಯ್ದೆ ತಿದ್ದುಪಡಿ ಮಸೂದೆ ವಿರೋಧಿಸಿ ತೆಲಂಗಾಣ ರಾಜ್ಯದಾದ್ಯಂತ ವಿದ್ಯುತ್ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ದನಿ ಎತ್ತಿದ ನೌಕರರು ಸೋಮವಾರ (ಆಗಸ್ಟ್ 8, 2022) ಹೈದರಾಬಾದ್ನ ವಿದ್ಯುತ್ ಸೌಧದಲ್ಲಿ ಧರಣಿ ನಡೆಸುತ್ತಿದ್ದಾರೆ. ತೆಲಂಗಾಣದ ಎಲ್ಲೆಡೆಯಿಂದ ವಿದ್ಯುತ್ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ರಾಜ್ಯಾದ್ಯಂತ ನೌಕರರು ಸೋಮವಾರ ಕರ್ತವ್ಯ ಬಹಿಷ್ಕರಿಸಿ, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾದರೆ ಜನರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ. ಕೇಂದ್ರ ತಂದಿರುವ ಹೊಸ ಕಾನೂನಿನಿಂದ ಗ್ರಾಹಕರಿಗೆ ತೀವ್ರ ನಷ್ಟ ಉಂಟಾಗಲಿದೆ. ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆ ತಿದ್ದುಪಡಿ ವಿಧೇಯಕ ಮಂಡಿಸಿದರೆ ಸಂಪೂರ್ಣವಾಗಿ ಕರ್ತವ್ಯ ಬಹಿಷ್ಕರಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಿದ್ಧ ಎಂದು ನೌಕರರು ಎಚ್ಚರಿಕೆ ನೀಡಿದರು.
ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ಆರೋಪಿಸಿದ ನೌಕರರು ತೀವ್ರ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದರು.