June 27, 2026
Saturday, June 27, 2026
spot_img

ವೃದ್ಧೆಯ ಸರ ದರೋಡೆ ಪ್ರಕರಣ: ಇಬ್ಬರ ಬಂಧನ, ಪ್ರಮುಖ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು ನಗರದ ಎಕ್ಕೂರು ಸಮೀಪ ವೃದ್ಧೆಯೊಬ್ಬರ ಕುತ್ತಿಗೆಯಿಂದ ಸುಮಾರು 1.50 ಲಕ್ಷ ರೂ. ಮೌಲ್ಯದ ಚಿನ್ನದ ಸರ ದರೋಡೆಗೈದು ಪರಾರಿಯಾಗಿದ್ದ ಪ್ರಕರಣವನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.


ಕಾರ್ಯಾಚರಣೆ ಸಂದರ್ಭ ಬಂಧಿತ ಆರೋಪಿಗಳ ಪೈಕಿ ಓರ್ವ ಪೊಲೀಸ್ ಸಿಬ್ಬಂದಿಯ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.


ಬಂಧಿತರನ್ನು ಬಾಗಲಕೋಟೆಯ ಅಲ್ತಾಫ್ ಹುಸೈನ್, ಉತ್ತರಪ್ರದೇಶದ ಮೊಹಮ್ಮದ್ ಸಾಹಿಲ್ ಯಾನೆ ಸಿದ್ದೀಖಿ ಹಾಗೂ ರವಿ ಬೌರಾ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಠಾಣೆಗೆ ಕರೆತರುತ್ತಿದ್ದ ವೇಳೆ ಈ ಪೈಕಿ ಅಲ್ತಾಫ್ ಹುಸೈನ್, ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಅವರನ್ನು ತಳ್ಳಿ ಪರಾರಿಯಾಗಿದ್ದಾನೆ. ಈ ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ವಿನಾಯಕ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಈ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಪರಾರಿಯಾಗಿರುವ ಅಲ್ತಾಫ್ ಹುಸೈನ್ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ಆರಂಭಿಸಲಾಗಿದ್ದು, ಆತನ ವಿವರಗಳನ್ನು ಇತರೆ ಜಿಲ್ಲೆಗಳು ಹಾಗೂ ರಾಜ್ಯಗಳ ಪೊಲೀಸ್ ಇಲಾಖೆಗಳಿಗೂ ರವಾನಿಸಲಾಗಿದೆ.

ಇದನ್ನೂ ಓದಿ:

ಏನಿದು ಘಟನೆ?

ಜೂ.14ರಂದು ಮಧ್ಯಾಹ್ನ ಸುಮಾರು 12.30ಕ್ಕೆ ವೃದ್ಧ ಮಹಿಳೆ ಎಕ್ಕೂರು ಬಸ್ ನಿಲ್ದಾಣದಿಂದ ಇಳಿದು ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸಮೀಪ ನಡೆದುಕೊಂಡು ಹೋಗುತ್ತಿದ್ದ ವೇಳೆ, ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ವಿಳಾಸ ಕೇಳುವ ನೆಪದಲ್ಲಿ ಆಕೆಯನ್ನು ತಡೆದು, ಕುತ್ತಿಗೆಯಲ್ಲಿದ್ದ ಸುಮಾರು 12 ಗ್ರಾಂ ತೂಕದ ಲಕ್ಷ್ಮಿ ಪೆಂಡೆಂಟ್ ಹೊಂದಿರುವ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಕಸಿದು ಪರಾರಿಯಾಗಿದ್ದರು. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿದ್ದ ಪೊಲೀಸರು ಜೂನ್ 26ರಂದು ಬೆಳಿಗ್ಗೆ ಪಾಂಡೇಶ್ವರದ ರೋಸಾರಿಯೋ ಶಾಲೆ ಸಮೀಪ ಈ ಮೂವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಆರೋಪಿಗಳು ಸರ ಕಳವು ಕೃತ್ಯದಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !