ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ರೇಟರ್ ಬೆಂಗಳೂರು ಅಥಾರಿಟಿ ಚುನಾವಣೆ ಮುಂದೂಡುವಿಕೆಯ ಹಿಂದೆ ರಾಜ್ಯ ಕಾಂಗ್ರೆಸ್ ಸರ್ಕಾರದ ದೊಡ್ಡ ಷಡ್ಯಂತ್ರ ಮತ್ತು ಕುತಂತ್ರ ಅಡಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ಅಭಿವೃದ್ಧಿ ಮಾಡಲು ಸಾಧ್ಯವಾಗಿಲ್ಲ:
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇದೇ ಮುಖ್ಯಮಂತ್ರಿಗಳು (ಡಿ.ಕೆ. ಶಿವಕುಮಾರ್) ಬೆಂಗಳೂರಿನ ಉಸ್ತುವಾರಿ ಸಚಿವರಾಗಿದ್ದಾರೆ. ಆದರೆ ಈ ಸರ್ಕಾರದ ಯೋಗ್ಯತೆಗೆ ಬೆಂಗಳೂರಿನಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯವಾಗಿಲ್ಲ. ಕೊನೆಪಕ್ಷ ರಸ್ತೆಗಳ ಮೇಲಿರುವ ಗುಂಡಿಗಳನ್ನು ಮುಚ್ಚಲೂ ಇವರಿಂದ ಸಾಧ್ಯವಾಗಿಲ್ಲ” ಎಂದು ಲೇವಡಿ ಮಾಡಿದರು.
ಇದನ್ನೂ ಓದಿ:
ಸೋಲಿನ ಭಯದಿಂದ ಕಪಟ ನಾಟಕ:
ಬೆಂಗಳೂರಿನ ಸದ್ಯದ ದುಸ್ಥಿತಿಯಿಂದಾಗಿ ಜನತೆ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಇಂತಹ ವಾತಾವರಣದಲ್ಲಿ ಜಿಬಿಎ ಚುನಾವಣೆ ನಡೆಸಿದರೆ ಐದೂ ಕಡೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಕಾಂಗ್ರೆಸ್ಗೆ ಭೀತಿ ಎದುರಾಗಿದೆ. ಇದೇ ಕಾರಣಕ್ಕೆ ಸೋಲಿನ ಭಯದಿಂದ ಚುನಾವಣಾ ಆಯೋಗದ ಮೂಲಕ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ ಚುನಾವಣೆ ಮುಂದೂಡುವ ನಾಟಕವನ್ನು ಸರ್ಕಾರ ಆಡುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.



