ಹೊಸದಿಗಂತ ವರದಿ ಮಡಿಕೇರಿ:
ಹಾಡಹಗಲೇ ಕಾಡಾನೆ ದಾಳಿ ನಡೆಸಿದ ಪರಿಣಾಮ ಕಾಫಿ ಬೆಳೆಗಾರರೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಸಿದ್ದಾಪುರ ಸಮೀಪದ ಇಂಜಿಲಗೆರೆಯಲ್ಲಿ ನಡೆದಿದೆ.
ಅಮ್ಮತ್ತಿ ಸಮೀಪದ ಕೌರಿ ನಿವಾಸಿ ಕಾಫಿ ಬೆಳೆಗಾರ ಉದ್ದಪಂಡ ಚಂಗಪ್ಪ (48) ಗಾಯಗೊಂಡವರು.
ಶುಕ್ರವಾರ ಬೆಳಗ್ಗೆ ಮನೆಯಿಂದ ಕಾಫಿ ತೋಟಕ್ಕೆ ಕಾಲ್ನಡಿಗೆಯಲ್ಲಿ ತೆರಳುವ ವೇಳೆ ಕಾಡಾನೆಯೊಂದು ಹಿಂಬದಿಯಿಂದ ಬಂದು ಚಂಗಪ್ಪ ಅವರ ಮೇಲೆ ದಾಳಿ ನಡೆಸಿದೆ ಎನ್ನಲಾಗಿದೆ. ದಾಳಿಯಿಂದ ಚಂಗಪ್ಪ ಅವರ ಸೊಂಟ, ಕೈ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅಮ್ಮತ್ತಿಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.