ಹೊಸದಿಗಂತ ವರದಿ ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಆನೆ–ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸುವುದು ಹಾಗೂ ಮೈಸೂರಿನ ತಿಪ್ಪಯ್ಯನ ಕೆರೆಯಲ್ಲಿ ನಗರ ವನ (ನಗರ್ ವನ್) ಯೋಜನೆ ಜಾರಿಗೊಳಿಸುವ ಸಂಬಂಧ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಈ ಸಂದರ್ಭ ಮಾತನಾಡಿದ ಯದುವೀರ್ ಒಡೆಯರ್ ಅವರು, ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಆನೆಗಳು ಕೃಷಿ ಭೂಮಿ ಮತ್ತು ಜನವಸತಿ ಪ್ರದೇಶಗಳಿಗೆ ನುಗ್ಗುತ್ತಿರುವ ಘಟನೆಗಳು ನಿರಂತರವಾಗಿ ಹೆಚ್ಚುತ್ತಿದ್ದು, ಇದು ಜಿಲ್ಲೆಯ ಜನರ ಪ್ರಮುಖ ಸಮಸ್ಯೆಯಾಗಿ ಪರಿಣಮಿಸಿದೆ ಎಂದು ಸಚಿವರ ಗಮನಕ್ಕೆ ತಂದರು.
ಆನೆಗಳ ದಾಳಿಯಿಂದ ಮಾನವ ಜೀವಹಾನಿ, ಗಾಯಗಳು, ಬೆಳೆ ನಷ್ಟ, ಆಸ್ತಿ ಹಾನಿ ಮತ್ತು ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದೆ. ವಿಶೇಷವಾಗಿ ಅರಣ್ಯದಂಚಿನ ಗ್ರಾಮಗಳಲ್ಲಿ ವಾಸಿಸುವ ರೈತರು, ತೋಟಗಾರರು ಮತ್ತು ಕಾರ್ಮಿಕರು ಈ ಸಮಸ್ಯೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಯದುವೀರ್ ಗಮನಸೆಳೆದರು.
ಈ ಹಿನ್ನೆಲೆಯಲ್ಲಿ ಆನೆ–ಮಾನವ ಸಂಘರ್ಷವನ್ನು ಕಡಿಮೆಗೊಳಿಸಲು ಸಮಗ್ರ ಹಾಗೂ ದೀರ್ಘಕಾಲೀನ ಕಾರ್ಯತಂತ್ರವನ್ನು ರೂಪಿಸಲು ಕೇಂದ್ರ ಸರ್ಕಾರದ ನೆರವು ಅಗತ್ಯವಿದೆ ಎಂದ ಸಂಸದರು, ಆನೆ ತಡೆಗೋಡೆಗಳ ಬಲವರ್ಧನೆ, ಸೌರ ಬೇಲಿ ವ್ಯವಸ್ಥೆ, ಆನೆಗಳ ಚಲನವಲನದ ವೈಜ್ಞಾನಿಕ ಮೇಲ್ವಿಚಾರಣೆ, ಮುನ್ನೆಚ್ಚರಿಕೆ ವ್ಯವಸ್ಥೆ, ಅರಣ್ಯ ವಾಸಸ್ಥಳಗಳ ಸುಧಾರಣೆ, ತ್ವರಿತ ಪ್ರತಿಕ್ರಿಯಾ ತಂಡಗಳ ರಚನೆ ಹಾಗೂ ಪೀಡಿತ ಕುಟುಂಬಗಳಿಗೆ ಮತ್ತು ರೈತರಿಗೆ ಸೂಕ್ತ ಪರಿಹಾರ ನೀಡುವ ವ್ಯವಸ್ಥೆಯನ್ನು ಬಲಪಡಿಸುವಂತೆ ಕೋರಿದರು.
ವನ್ಯಜೀವಿ ಸಂರಕ್ಷಣೆ ಅತ್ಯಂತ ಮುಖ್ಯವಾದರೂ, ಅರಣ್ಯದಂಚಿನ ಪ್ರದೇಶಗಳಲ್ಲಿ ವಾಸಿಸುವ ಜನರ ಜೀವ ಮತ್ತು ಜೀವನೋಪಾಯದ ರಕ್ಷಣೆಯೂ ಅಷ್ಟೇ ಮಹತ್ವದ್ದಾಗಿದೆ ಎಂದು ಯದುವೀರ್ ಒತ್ತಿ ಹೇಳಿದರು.
ಇದೇ ಸಂದರ್ಭದಲ್ಲಿ ಮೈಸೂರಿನ ಹೊರವರ್ತುಲ ರಸ್ತೆಯ ಸಮೀಪ, ಸರ್ದಾರ್ ವಲ್ಲಭಭಾಯಿ ಪಟೇಲ್ ನಗರದ ಬಳಿ ಇರುವ ತಿಪ್ಪಯ್ಯನ ಕೆರೆಯನ್ನು ನಗರ ವನ ಯೋಜನೆಯಡಿ ಅಭಿವೃದ್ಧಿಪಡಿಸುವಂತೆ ಪ್ರತ್ಯೇಕ ಮನವಿಯನ್ನೂ ಸಂಸದರು ಸಲ್ಲಿಸಿದರು.
ಇದನ್ನೂ ಓದಿ:
ತಿಪ್ಪಯ್ಯನ ಕೆರೆ ಇಂದು ಮೈಸೂರಿನ ಪ್ರಮುಖ ಪರಿಸರ, ಜೀವವೈವಿಧ್ಯ ಮತ್ತು ಮನರಂಜನಾ ತಾಣವಾಗಿ ರೂಪುಗೊಂಡಿದ್ದು, ನಗರ ನಿವಾಸಿಗಳಿಗೆ ಹಸಿರು ವಾತಾವರಣವನ್ನು ಒದಗಿಸುವುದರ ಜೊತೆಗೆ ಅನೇಕ ಪಕ್ಷಿಗಳು ಮತ್ತು ಇತರ ಜೀವಿಗಳ ಆಶ್ರಯ ತಾಣವಾಗಿಯೂ ಬೆಳೆಯುತ್ತಿದೆ ಎಂದು ಅವರು ವಿವರಿಸಿದರು.
ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಮಹತ್ವಾಕಾಂಕ್ಷಿ ಯೋಜನೆಯಾದ ನಗರ ವನ ಯೋಜನೆ ನಗರ ಪ್ರದೇಶಗಳಲ್ಲಿ ಹಸಿರು ವನಗಳನ್ನು ನಿರ್ಮಿಸಿ ಪರಿಸರ ಸಮತೋಲನ ಕಾಪಾಡುವುದು, ಜೀವವೈವಿಧ್ಯವನ್ನು ವೃದ್ಧಿಸುವುದು ಹಾಗೂ ನಾಗರಿಕರಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ ಎಂದು ಅವರು ತಿಳಿಸಿದರು.
ಈ ಎಲ್ಲಾ ಅಂಶಗಳನ್ನು ಪರಿಗಣಿಸಿದರೆ ತಿಪ್ಪಯ್ಯನ ಕೆರೆ ನಗರ ವನ ಯೋಜನೆ ಜಾರಿಗೆ ಅತ್ಯಂತ ಸೂಕ್ತ ಸ್ಥಳವಾಗಿದ್ದು, ಈ ಯೋಜನೆಗೆ ಅಗತ್ಯ ತಾಂತ್ರಿಕ ಹಾಗೂ ಆರ್ಥಿಕ ನೆರವು ನೀಡುವಂತೆ ಸಚಿವಾಲಯವನ್ನು ಕೋರಿದರು. ಈ ಯೋಜನೆ ಜಾರಿಯಾದಲ್ಲಿ ಮೈಸೂರಿನ ನಗರ ಹಸಿರು ವಲಯ ವಿಸ್ತರಣೆಯಾಗುವುದರ ಜೊತೆಗೆ ಪರಿಸರ ಸಂರಕ್ಷಣೆ, ಜೀವವೈವಿಧ್ಯ ಅಭಿವೃದ್ಧಿ, ವಿದ್ಯಾರ್ಥಿಗಳಿಗೆ ಪ್ರಕೃತಿ ಅಧ್ಯಯನ ಅವಕಾಶ ಹಾಗೂ ಸಾರ್ವಜನಿಕರಿಗೆ ಉತ್ತಮ ಆರೋಗ್ಯಕರ ಪರಿಸರ ಒದಗಿಸಲು ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಜನಸುರಕ್ಷತೆ ಮತ್ತು ಪರಿಸರ ಸಂರಕ್ಷಣೆಗೆ ಬದ್ಧತೆ ಸಭೆಯ ನಂತರ ಮಾತನಾಡಿದ ಯದುವೀರ್ ಒಡೆಯರ್ ಅವರು, ಕೊಡಗಿನ ಆನೆ–ಮಾನವ ಸಂಘರ್ಷ ಮತ್ತು ಮೈಸೂರಿನ ನಗರ ಹಸಿರು ಮೂಲಸೌಕರ್ಯ ಅಭಿವೃದ್ಧಿ ಎರಡೂ ವಿಷಯಗಳು ತಕ್ಷಣದ ಗಮನಕ್ಕೆ ಅರ್ಹವಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಹೇಳಿದರು.
ಜನರ ಸುರಕ್ಷತೆ, ಪರಿಸರ ಸಂರಕ್ಷಣೆ ಹಾಗೂ ಸುಸ್ಥಿರ ಅಭಿವೃದ್ಧಿಯನ್ನು ಸಮನ್ವಯಗೊಳಿಸುವ ನಿಟ್ಟಿನಲ್ಲಿ ತಾವು ನಿರಂತರವಾಗಿ ಪ್ರಯತ್ನಿಸುತ್ತಿರುವುದಾಗಿ ಅವರು ತಿಳಿಸಿದರು. ಸಂಸದರ ಮನವಿಗಳನ್ನು ಸಕಾರಾತ್ಮಕವಾಗಿ ಪರಿಗಣಿಸುವುದಾಗಿ ಹಾಗೂ ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಭರವಸೆ ನೀಡಿದರು.



