ಹೊಸದಿಗಂತ ವರದಿ, ಬಾಗಲಕೋಟೆ:
ರಾಜ್ಯದಲ್ಲಿ ಭಾವೈಕ್ಯತೆಗೆ ಪೆಟ್ಟು ಕೊಡುವ ಸನ್ನಿವೇಶ ನಿರ್ಮಾಣವಾಗುತ್ತಿದ್ದು, ಇದನ್ನು ಕೂಡಲೇ ನಿಯಂತ್ರಣಕ್ಕೆ ತರಬೇಕು ಎಂದು ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಒತ್ತಾಯಿಸಿದರು.
ನಗರದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಅಶಾಂತಿ ವಾತಾವರಣ ಸೃಷ್ಟಿ ಆಗುತ್ತಿದೆ. ಅಶಾಂತಿ ಹರಡುತ್ತಿರುವ ವಿಛ್ಛಿದ್ರಕಾರಿ ಶಕ್ತಿಗಳ ವಿರುದ್ದ ಕಠಿಣ ಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯದ ಗೃಹ ಸಚಿವರನ್ನು ಕೂಡಲೇ ಬದಲಾಯಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದ ಅವರು ಆರಗ ಜ್ಞಾನೇಂದ್ರ ಅವರು ಗೃಹ ಸಚಿವರಾದಾಗಿನಿಂದಲೂ ಒಂದಿಲ್ಲೊಂದು ಘಟನೆಗಳು ರಾಜ್ಯದಲ್ಲಿ ನಡೆಯುತ್ತಿವೆಯಾದರೂ ಕ್ರಮಗಳು ಜರುಗುತ್ತಿಲ್ಲ ಎಂದು ಅವರು ಆಪಾದಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದನ್ನು ಸ್ವಾಗತಿಸಿದ ಅವರು ವಿವಾದ ವಿಕೋಪಕ್ಕೆ ಹೋಗುವ ಮುನ್ನ ಶಾಂತಿ ವಾತಾವರಣ ನಿರ್ಮಾಕ್ಕೆ ಅಗತ್ಯ ಲ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಮಾಜಿ ಸಚಿವ ಎಚ್.ವೈ. ಮೇಟಿ, ರಕ್ಷಿತಾ ಈಟಿ, ನಾಗರಾಜ ಹದ್ಲಿ, ರಾಜು ಮನ್ನಿಕೇರಿ, ಎಸ್. ಎಂ ರಾಂಫೂರ, ಹಾಜೇಸಾಬ್ ದಂಡೀನ, ಚನ್ನವೀರ ಅಂಗಡಿ ಇತರರು ಇದ್ದರು.