ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು: ಬಿಜೆಪಿ ರಾಜ್ಯದಲ್ಲಿ ಸಕಾರಾತ್ಮಕ ಹಾಗೂ ಸಮರ್ಥ ವಿಪಕ್ಷವಾಗಿ ಕಾರ್ಯನಿರ್ವಹಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ತಿಳಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಜಿಲ್ಲಾ ಅಧ್ಯಕ್ಷರು, ಜಿಲ್ಲಾ ಪ್ರಭಾರಿಗಳ ಸಭೆ ನಡೆಸಿ ಚುನಾವಣೆ ಸಂಬಂಧ ಮಾಹಿತಿ ಪಡೆಯಲಾಗಿದೆ ಎಂದ ಅವರು, ಎಲ್ಲ ಕಾರ್ಯಕರ್ತರು ಚುನಾವಣೆಯಲ್ಲಿ ಪಕ್ಷಕ್ಕಾಗಿ ವಿಶೇಷ ಶ್ರಮಪಟ್ಟಿದ್ದು, ಅವರಿಗೆ ಧನ್ಯವಾದಗಳು ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ವಿವಿಧ ಗ್ಯಾರಂಟಿಗಳು ಶರ್ತರಹಿತವಾಗಿ ಅನುಷ್ಠಾನ ಆಗಲಿ ಎಂದು ಆಗ್ರಹಿಸಿದ ಅವರು, ರಾಜ್ಯದಲ್ಲಿ ಬಿಜೆಪಿ ಶೇಕಡಾವಾರು ಮತ ಗಳಿಕೆ ಕಡಿಮೆ ಆಗಿಲ್ಲ. ಜೆಡಿಎಸ್ ಪಕ್ಷದ ಸ್ವಲ್ಪ ಮತ ಪ್ರಮಾಣವು ಕಾಂಗ್ರೆಸ್ ಪಕ್ಷಕ್ಕೆ ಲಭಿಸಿದೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸ್ಥಾನಗಳು ಲಭಿಸಿವೆ ಎಂದರು.
ನಾವು ಇನ್ನಷ್ಟು ಹೆಚ್ಚು ಸೀಟು ನಿರೀಕ್ಷಿಸಿದ್ದೆವು. ಕೆಲವು ಕ್ಷೇತ್ರಗಳಲ್ಲಿ ಮತ ಗಳಿಕೆ ಹೆಚ್ಚಾಗಿದೆ. ಕೆಲವೆಡೆ ಕಡಿಮೆ ಆಗಿದೆ ಎಂದು ತಿಳಿಸಿದ ಅವರು, ವಿಪಕ್ಷ ನಾಯಕನ ಕುರಿತಂತೆ ಸಂಸದೀಯ ಮಂಡಳಿ ನಿರ್ಧರಿಸಲಿದೆ ಎಂದರು. ಪಕ್ಷದ ಶಾಸಕರು ವಿಪಕ್ಷ ನಾಯಕನನ್ನು ಆಯ್ಕೆ ಮಾಡುತ್ತಾರೆ ಎಂದು ತಿಳಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರವು ದೇಶದ ಸರ್ವತೋಮುಖ ಪ್ರಗತಿಗೆ ಶ್ರಮಿಸುತ್ತಿದೆ. ಬಡವರು, ರೈತರು, ಮಹಿಳೆಯರು, ಎಸ್ಸಿ, ಎಸ್ಟಿ ಸಮುದಾಯಕ್ಕಾಗಿ ಸರಕಾರ ಶ್ರಮಿಸಿದೆ ಎಂದ ಅವರು, 9 ವರ್ಷಗಳಲ್ಲಿ ಮೋದಿಜಿ ಅವರ ಸರಕಾರ ಮಾಡಿದ ಸಾಧನೆಗಳನ್ನು ಕರ್ನಾಟಕದ ಜನತೆಗೆ ತಿಳಿಸಲಾಗುವುದು ಎಂದು ಹೇಳಿದರು.