ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕರ್ನಾಟಕದಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಈ ಮೂಲಕ ಮೂಲಕ ಆರ್ಥಿಕತೆಗೆ ಉತ್ತೇಜನ ನೀಡಲು ಹಾಗೂ ಸ್ಥಳೀಯರಿಗೆ ಉದ್ಯೋಗ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಬೆಳಗಾವಿ ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುವುದು ಹಾಗೂ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು ಎಂದರು.
ಈಗಾಗಲೇ ಧಾರವಾಡ ಜಿಲ್ಲೆಯಲ್ಲಿ ಕೈಗಾರಿಕಾ ಕ್ಲಸ್ಟರ್ ಸ್ಥಾಪಿಸಲಾಗುತ್ತಿದೆ. 19 ಘಟಕಗಳು ರೂ.1255 ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿದ್ದು, ಸುಮಾರು 2450 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಅಲ್ಲದೇ, ಧಾರವಾಡದ ಸಮೀಪ ಸುಮಾರು 3000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶವನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.
ಅದೇ ರೀತಿ ರಾಯಚೂರಿನಲ್ಲಿ ಹತ್ತಿ ಅಧಾರಿತ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕ ಅಭಿವೃದ್ಧಿ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಒತ್ತು ನೀಡಲಾಗುವುದು. ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್ ಅನ್ನು ಅಂದಾಜು 1500 ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗುವುದು ಎಂದರು.
ಉತ್ತರ ಕರ್ನಾಟಕವು ಸಮೃದ್ಧ ಪ್ರವಾಸೋದ್ಯಮಗಳ ತಾಣವಾಗಿದೆ. ಐತಿಹಾಸಿಕ ಮಹತ್ವವಿರುವ ಈ ತಾಣಗಳು ಅಂತಾರಾಷ್ಟ್ರೀಯವಾಗಿಯೂ ಮಹತ್ವ ಪಡೆದಿವೆ. ಆದರೆ ಇದಕ್ಕೆ ಸಾಕಷ್ಟು ಮಹತ್ವ ನೀಡದೆ ಹಿನ್ನಡೆಯನ್ನು ಅನುಭವಿಸುತ್ತಿದೆ. ರಾಜ್ಯ ಸರ್ಕಾರ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಸಮಗ್ರ ಕ್ರಿಯಾಯೋಜನೆಯನ್ನು ರೂಪಿಸಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.