ಕಲಬುರಗಿಯಲ್ಲಿ ಸೋಲಾರ ಪಾರ್ಕ್ ಸ್ಥಾಪನೆ: ಸಚಿವ ಸುನೀಲ್ ಕುಮಾರ್

ಹೊಸದಿಗಂತ ವರದಿ,ಯಾದಗಿರಿ:

ರಾಜ್ಯದಲ್ಲಿ ವಿದ್ಯುತ್ ನಿರ್ವಹಣೆಗೆ ವಿಶೇಷ ಯೋಜನೆ ಹಮ್ಮಿಕೊಂಡಿದ್ದು, ಕಲಬುರಗಿಯಲ್ಲಿ ಹಸಿರು FC ವಿದ್ಯುತ್ ಯೋಜನೆ ಅಡಿಯಲ್ಲಿ 500 ಮೆಗಾ ವಾಟ್ ವಿದ್ಯುತ್ ಉತ್ಪಾದನೆಗೆ ಸೋಲಾರ್ ಪಾರ್ಕ್ ಸ್ಥಾಪನೆ ಮಾಡಲು ಈಗಾಗಲೇ ಸ್ಥಳ ಗುರುತಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಖಾತೆ ಸಚಿವವಿ. ಸುನೀಲ್ ಕುಮಾರ ಅವರು ಹೇಳಿದರು.

ಯಾದಗಿರಿ ಮತಕ್ಷೇತ್ರ ವ್ಯಾಪ್ತಿಯ ಕೊಳ್ಳೊರು ಎಮ್ ಗ್ರಾಮದಲ್ಲಿ ನಿರ್ಮಾಣವಾಗಿರುವ 110/11 ಕೆ.ವಿ ವಿದ್ಯುತ್ ಉಪಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಾದ್ಯಂತ ಗುಣ ಮಟ್ಟದ ಮತ್ತು ನಿರಂತರ ವಿದ್ಯುತ್ ಒದಗಿಸಲು ಉಪವಿಭಾಗ ತೆರೆಯಲಾಗಿದೆ. ಅನೇಕ ಕಡೆ ಸಬ್ ಸ್ಟೇಷನ್ ನಿರ್ಮಾಣಗೊಂಡಿದ್ದು ನಿರಂತರ ವಿದ್ಯುತ್ ಒದಗಿಸಲಾಗುತ್ತಿದೆ ಎಂದರು.

ಸ್ಥಳೀಯ ಶಾಸಕರು ಮತ್ತು ಸಾರ್ವಜನಿಕ ಬೇಡಿಕೆಯಂತೆ ಈ ಭಾಗದಲ್ಲಿ ಈ ಉಪಕೇಂದ್ರ ಸ್ಥಾಪನೆ ಮಾಡಲಾಗಿದೆ ಎಂದರು.
ಸಮರ್ಪಕ ಹಾಗೂ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು ಎಂದು ರಾಜ್ಯದಲ್ಲಿ ಹೊಸದಾಗಿ 37 ಕಡೆಗಳಲ್ಲಿ ನೂತನ ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಆದ್ಯತೆ ಮೇರೆಗೆ ಉಪ ಕೇಂದ್ರ ಸ್ಥಾಪನೆ ಕಾರ್ಯ ನಡೆಯುತ್ತಿದೆ.
ಯಾವುದೇ ಕಾರಣಕ್ಕೂ ಗ್ರಾಹಕರಿಗೆ ಮತ್ತು ರೈತರಿಗೆ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಬೊಮ್ಮಾಯಿ ನೇತೃತ್ವದ ಸರಕಾರದ ಒಂದು ವರ್ಷದ ಅವಧಿಯಲ್ಲಿ ಹಳ್ಳಿಗಳಲ್ಲಿ ಟಿಸಿ ( ವಿದ್ಯುತ್ ವರ್ಧಕ) ಸುಟ್ಟ 24 ಗಂಟೆಯೊಳಗೆ ಬದಲಾವಣೆ ಮಾಡುವ ಮೂಲಕ ರೈತರ ನೆರವಿಗೆ ಧಾವಿಸಿದೆ. ಇದರ ಫಲವಾಗಿ ನೌಕರರ ಸಹಕಾರದಿಂದ ಇಲ್ಲಿಯವರೆಗೂ 88 ಸಾವಿರ ಟಿಸಿ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ಬೆಳಕು ಯೋಜನೆಯಡಿಯಲ್ಲಿ ವಿದ್ಯುತ್ ರಹಿತ 29 ಸಾವಿರ ಮನೆಗಳಿಗೆ ವಿದ್ಯುತ್ ನೀಡಲಾಗಿದೆ. ಇಂಧನ ಇಲಾಖೆಯ ಜನಸ್ನೇಹಿ ಕಾರ್ಯಕ್ರಮಗಳನ್ನು ರೂಪಿಸಿ, ಪ್ರಗತಿಯತ್ತ ಹೆಜ್ಜೆ ಹಾಕುತ್ತಿದೆ ಎಂದವರು ವಿವರಿಸಿದರು.

ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಮಾತನಾಡಿ, ವಡಗೆರಾ ತಾಲೂಕಿಗೆ ವಿದ್ಯುತ್ ಉಪ ವಿಭಾಗ ಮಂಜೂರು ಮಾಡುವಂತೆ ಬೇಡಿಕೆಯಿಟ್ಟರು.

ಈ ಸಂದರ್ಭದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಚಂದು ಪಾಟೀಲ, ಅಲೆಮಾರಿ, ಅರೆ ಅಲೆಮಾರಿ ನಿಗಮದ ಅಧ್ಯಕ್ಷ ದೇವೇಂದ್ರನಾಥ ನಾದ, ನಿಗಮ ಎಂಡಿ ರಾಹುಲ್,ಯಾದಗಿರಿ ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ, ಗ್ರಾಮ ಪಂಚಾಯತ ಅಧ್ಯಕ್ಷೆ ಚಂದ್ರಮ್ಮ ಸೇರಿದಂತೆ ಮೊದಲಾದವರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!