ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀಟ್ ಪರೀಕ್ಷಾ ಅಕ್ರಮವನ್ನು ಮುಂದಿಟ್ಟುಕೊಂಡು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ವ್ಯವಸ್ಥಿತ ಷಡ್ಯಂತ್ರ ರೂಪಿಸುತ್ತಿದೆ ಎಂದು ಸಂಸದ ಯದುವೀರ್ ಒಡೆಯರ್ ಗಂಭೀರ ಆರೋಪ ಮಾಡಿದ್ದಾರೆ.
ಕೇಂದ್ರದಿಂದ ಕಠಿಣ ಕ್ರಮ, ಆದರೂ ಪ್ರತಿಭಟನೆ ಯಾಕೆ?
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಶ್ನೆ ಪತ್ರಿಕೆ ಬಹಿರಂಗವಾಗಿರುವ ವಿಷಯವನ್ನು ಕೇಂದ್ರ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ. ಸುಪ್ರೀಂ ಕೋರ್ಟ್ ಸೂಚನೆಯಂತೆ ಮರುಪರೀಕ್ಷೆ ನಡೆದು, ಅದರ ಫಲಿತಾಂಶವೂ ಪ್ರಕಟವಾಗಿದೆ. ವಿದ್ಯಾರ್ಥಿಗಳಿಗೆ ನ್ಯಾಯ ಸಿಕ್ಕಿದ್ದರೂ ಸಹ ಕಾಂಗ್ರೆಸ್ ಪಕ್ಷವು ಇದೇ ವಿಚಾರವನ್ನು ಮುಂದಿಟ್ಟುಕೊಂಡು ದೇಶದಲ್ಲಿ ಅಶಾಂತಿ ಮೂಡಿಸಲು ಮತ್ತು ಜನರ ದಾರಿ ತಪ್ಪಿಸಲು ಯತ್ನಿಸುತ್ತಿದೆ ಎಂದು ಕಿಡಿಕಾರಿದರು.
ಇದನ್ನೂ ಓದಿ:
ಬೇರೆ ದೇಶಗಳಂತೆ ಇಲ್ಲಿ ಅರಾಜಕತೆ ಸಾಧ್ಯವಿಲ್ಲ
ನೆರೆರಾಷ್ಟ್ರಗಳ ಉದಾಹರಣೆ ನೀಡಿದ ಸಂಸದರು, ನೆರೆಯ ಶ್ರೀಲಂಕಾ, ಬಾಂಗ್ಲಾದೇಶ ಮತ್ತು ನೇಪಾಳ ದೇಶಗಳಲ್ಲಿ ಉಂಟಾದ ರಾಜಕೀಯ ಬಿಕ್ಕಟ್ಟು ಮತ್ತು ಅರಾಜಕತೆಯ ವಾತಾವರಣವನ್ನು ಭಾರತದಲ್ಲೂ ಮರುಸೃಷ್ಟಿಸಲು ಕಾಂಗ್ರೆಸ್ ಆಲೋಚಿಸುತ್ತಿದೆ. ಆದರೆ, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಅತ್ಯಂತ ಗಟ್ಟಿಯಾಗಿದೆ. ದೇಶದ ಜನತೆ ಇಂತಹ ಷಡ್ಯಂತ್ರಗಳಿಗೆ ಮಣಿಯುವುದಿಲ್ಲ. ಜನರಿಗೆ ಯಾವುದೇ ಅಸಮಾಧಾನವಿದ್ದರೂ ಅವರು ಮತದಾನದ ಮೂಲಕವೇ ತಕ್ಕ ಉತ್ತರ ನೀಡುತ್ತಾರೆ. ಬೇರೆ ದೇಶಗಳಲ್ಲಿ ಮಾಡಿದಂತೆ ಇಲ್ಲಿ ಅರಾಜಕತೆ ತರಲು ಯಾರಿಂದಲೂ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.



