ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ನನ್ನ ಮಾತೃಭಾಷೆಯಲ್ಲದಿದ್ದರೂ, ನನ್ನ ದೇಶದ ಎಲ್ಲಾ ಭಾಷೆಗಳು, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ನಾನು ಆಳವಾಗಿ ಗೌರವಿಸುತ್ತೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದ್ದಾರೆ.
ಇಂದು ಮೈಸೂರಿನಲ್ಲಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ(ಎಐಐಎಸ್ಎಚ್)ಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡದಲ್ಲಿ ಭಾಷಣ ಮಾಡಿ, ವೇದಿಕೆಯಲ್ಲಿ ಕುಳಿತಿದ್ದ ಗಣ್ಯರಿಗೆ ನನ್ನ ಭಾಷೆ ಅರ್ಥವಾಗಿದೆಯೇ ಎಂದು ಕೇಳಿದರು. ಉತ್ತರಿಸಿದ ಮುರ್ಮು ಅವರು, ‘ಗೌರವಾನ್ವಿತ ಮುಖ್ಯಮಂತ್ರಿಗಳಿಗೆ ನಾನು ಹೇಳಲು ಬಯಸುತ್ತೇನೆ, ಕನ್ನಡ ನನ್ನ ಮಾತೃಭಾಷೆಯಲ್ಲದಿದ್ದರೂ, ನನ್ನ ದೇಶದ ಎಲ್ಲಾ ಭಾಷೆಗಳು, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ನಾನು ಆಳವಾಗಿ ಗೌರವಿಸುತ್ತೇನೆ. ಪ್ರತಿಯೊಂದರ ಬಗ್ಗೆಯೂ ನನಗೆ ಅಪಾರ ಗೌರವವಿದೆ’ ಎಂದು ಹೇಳಿದರು.
ಪ್ರತಿಯೊಬ್ಬರೂ ತಮ್ಮ ಭಾಷೆಯನ್ನು ಜೀವಂತವಾಗಿಡಲು, ಅವರ ಸಂಪ್ರದಾಯಗಳು ಮತ್ತು ಸಂಸ್ಕೃತಿಯನ್ನು ಸಂರಕ್ಷಿಸಲು ಮತ್ತು ಆ ದಿಕ್ಕಿನಲ್ಲಿ ಮುಂದುವರಿಯಬೇಕೆಂದು ನಾನು ಬಯಸುತ್ತೇನೆ. ಇದಕ್ಕಾಗಿ ನಾನು ಶುಭಾಶಯಗಳನ್ನು ಕೋರುತ್ತೇನೆ ಮತ್ತು ನಾನು ಖಂಡಿತವಾಗಿಯೂ ಕನ್ನಡವನ್ನು ಕ್ರಮೇಣ ಕಲಿಯಲು ಪ್ರಯತ್ನಿಸುತ್ತೇನೆ ಎಂದು ರಾಷ್ಟ್ರಪತಿಗಳು ನಗುತ್ತಾ ಹೇಳಿದರು.