ಹೊಸದಿಗಂತ ವರದಿ, ಮೈಸೂರು
ನಮ್ಮ ದೇಶ ಪ್ರೇಮ ಸ್ವಾತಂತ್ರ್ಯ ದಿನಾಚರಣೆಗಷ್ಟೇ ಸೀಮಿತಗೊಳ್ಳಬಾರದು. ದೇಶಪ್ರೇಮ ನಮ್ಮಲ್ಲಿ ಪ್ರತಿದಿನವೂ, ಪ್ರತಿಕ್ಷಣವೂ ಇರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಸೋಮವಾರ ನಗರದ ಬನ್ನಿಮಂಟಪದಲ್ಲಿರುವ ಪಂಜಿನ ಕವಾಯಿತು ಮೈದಾನದಲ್ಲಿ ನಡೆದ 75 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ನಮಗೆ ಸ್ವಾತಂತ್ರ್ಯ ಲಭಸಿ ಇಂದಿಗೆ 75 ವರ್ಷಗಳು ಆಗಿವೆ. ಈ ಹಿನ್ನೆಲೆಯಲ್ಲಿ ನಾವು ದೇಶಾದ್ಯಂತ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿದ್ದೇವೆ. ಈ ಅಮೃತ ಘಳಿಗೆಗೆ ನಾವೆಲ್ಲ ಸಾಕ್ಷಿಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.
ದೇಶದ ಸ್ವಾತಂತ್ರಕ್ಕಾಗಿ ಹೋರಾಟ, ತ್ಯಾಗ, ಬಲಿದಾನಗಳನ್ನು ಮಾಡಿದ ಹಿರಿಯರನ್ನು ನಾವು ನೆನಪು ಮಾಡಿಕೊಳ್ಳಬೇಕು. ವೈವಿಧ್ಯತೆಯಲ್ಲಿ ಏಕತೆ ನಮ್ಮ ದೇಶದ ಸೌಂದರ್ಯವಾಗಿದೆ. ನಾವೆಲ್ಲರೂ ಒಂದೇ ಎಂಬ ಭಾವನೆ ನಮ್ಮನ್ನು ಬೆಸೆಯಬೇಕು.
ಸ್ವಾತಂತ್ರ್ಯ ಹೋರಾಟಗಾರರ ಆಶಯದಂತೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ನಮ್ಮದು ಜನಪರ ಸರ್ಕಾರ. ನಾಡಿನ ಜನತೆಯ ಶ್ರೇಯೋಭಿವೃದ್ಧಿಯೇ ನಮ್ಮ ಆದ್ಯ ಕರ್ತವ್ಯ. ಚುನಾವಣಾ ಪ್ರಣಾಳಿಕೆಯಲ್ಲಿ ನಾಡಿನ ಜನತೆಗೆ ನೀಡಿರುವ ಭರವಸೆಯಂತೆ ಸಮೃದ್ಧ ಕರ್ನಾಟಕವನ್ನು ನಿರ್ಮಿಸಲು ಹಲವಾರು ಯೋಜನೆಗಳನ್ನು ರೂಪಿಸಿ, ಅನುಷ್ಠಾನಕ್ಕೆ ತಂದಿದ್ದೇವೆ ಎಂದು ಹೇಳಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ