ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಬಳ್ಳಾಪುರದ ವ್ಯಾಪ್ತಿಯಲ್ಲಿ ಬರುವ ಎಲ್ಲ ದೇಗುಲಗಳಿಗೆ ಜಾತಿ, ಕುಲ, ಧರ್ಮದ ಹೊರತಾಗಿಯೂ ಎಲ್ಲರಿಗೂ ಪ್ರವೇಶ ಇದೆ ಎಂದು ಚಿಕ್ಕಬಳ್ಳಾಪುರ ತಹಶೀಲ್ದಾರ್ ಆದೇಶಿಸಿದ್ದಾರೆ.
ಚಿಕ್ಕಬಳ್ಳಾಪುರ ಮತ್ತು ಮಂಚೇನಹಳ್ಳಿ ತಾಲ್ಲೂಕು ವ್ಯಾಪ್ತಿಯ ದೇಗುಲಗಳಲ್ಲಿ ಜಾತಿ, ಧರ್ಮ, ಲಿಂಗದ ಕಾರಣಕ್ಕೆ ದೇಗುಲ ಪ್ರವೇಶಕ್ಕೆ ಅಡ್ಡಿಪಡಿಸಿದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮುಜರಾಯಿ ಮತ್ತು ಖಾಸಗಿ ದೇವಾಲಯಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುವುದು ಭಕ್ತರ ಹಕ್ಕು. ದೇವರ ದೃಷ್ಟಿಯಲ್ಲಿ ಎಲ್ಲ ಭಕ್ತರು ಸಮಾನರು ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಪ್ರದೀಪ್ ಆದೇಶದ ಪ್ರಕಾರ ತಹಶೀಲ್ದಾರ್ ಹೇಳಿಕೆ ನೀಡಿದ್ದಾರೆ.
ಸಂವಿಧಾನದ ಪ್ರಕಾರ ಜಾತಿ, ಜನಾಂಗ, ಧರ್ಮ, ಲಿಂಗ, ಜನ್ಮಸ್ಥಳದ ಆಧಾರದಲ್ಲಿ ತಾರತಮ್ಯ ಮಾಡುವುದನ್ನು ನಿಷೇಧಿಸಲಾಗಿದೆ. ಮುಜರಾಯಿ ದೇಗುಲಗಳ ಜೊತೆಗೆ ಖಾಸಗಿ ದೇಗುಲಗಳಲ್ಲಿಯೂ ಪ್ರವೇಶ ನಿರಾಕರಿಸುವುದು ಕಾನೂನು ಬಾಹಿರ ಎಂದಿದ್ದಾರೆ.



