ಹೊಸದಿಗಂತ ವಿಜಯಪುರ:
ರಾಜ್ಯ ಸರ್ಕಾರ ಸಂಪೂರ್ಣವಾಗಿ ದಿವಾಳಿ, ಪಾಪರ್ ಆಗಿದ್ದು, ಈ ಸರ್ಕಾರದಿಂದ ಲೂಟಿ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೂರಿದರು.
ಜಿಲ್ಲೆಯ ಮುದ್ದೇಬಿಹಾಳದಲ್ಲಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ನೇತೃತ್ವದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಪರ ಬಹಿರಂಗ ಪ್ರಚಾರ ಸಭೆಗೂ ಮುನ್ನ ಇಲ್ಲಿನ ಎಂಜಿವಿಸಿ ಕಾಲೇಜಿನ ಹೆಲಿಪ್ಯಾಡ್ ನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ತೆರಿಗೆ ಹಣ ಎಲ್ಲಿ ಹೋಯ್ತು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.
ರಾಜ್ಯದಲ್ಲಿ ಬರಗಾಲವಿದ್ದರೂ ಈ ಸರ್ಕಾರ ರೈತರ ಕಷ್ಟಕ್ಕೆ ಸ್ಪಂದಿಸದೆ ಕೇಂದ್ರವನ್ನು ದೂಷಿಸುತ್ತ ಜನರ ದಾರಿ ತಪ್ಪಿಸುತ್ತಿದೆ ಎಂದು ಹರಿಹಾಯ್ದರು.
ರಾಜ್ಯದಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ಬರಗಾಲ ಬಂದರೆ ಮೊದಲು ನಮ್ಮ ರಾಜ್ಯದ ಪಾಲಿನ ಪರಿಹಾರ ಖರ್ಚು ಮಾಡಿ, ಆ ನಂತರ ಕೇಂದ್ರದಿಂದ ಪರಿಹಾರ ಕೇಳುತ್ತಿದ್ದೆವು. ಆದರೆ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ತನ್ನ ಪಾಲನ್ನು ಖರ್ಚು ಮಾಡದೆ ಕೇಂದ್ರದತ್ತ ಬೊಟ್ಟು ಮಾಡುತ್ತಿದೆ. ಇದು ರಾಜ್ಯ ಸರ್ಕಾರ ದಿವಾಳಿ, ಪಾಪರ್ ಆಗಿರುವ ಲಕ್ಷಣವಾಗಿದೆ. ಕೇಂದ್ರ ಸರ್ಕಾರ ತನ್ನ ಪಾಲನ್ನು ರಾಜ್ಯಗಳಿಗೆ ಕೊಟ್ಟೇ ಕೊಡುತ್ತದೆ. ಇದರಲ್ಲಿ ಸಂಶಯವಿಲ್ಲ. ಆದರೆ ರಾಜ್ಯದಲ್ಲೀಗ ಬರಗಾಲವಿದೆ. ಕಾಂಗ್ರೆಸ್ ಸರ್ಕಾರ ರೈತರ ಕಷ್ಟಕ್ಕೆ ಸ್ಪಂದಿಸುವ ಬದಲು ಕೇಂದ್ರವನ್ನು ದೂಷಿಸಿ ಜನರ ದಾರಿ ತಪ್ಪಿಸುತ್ತಿದೆ. ಜನರ ತೆರಿಗೆ ಹಣ ಎಲ್ಲಿ ಹೋಯ್ತು. ಈ ಸರ್ಕಾರದಿಂದ ಲೂಟಿ ನಡೆಯುತ್ತಿದೆ ಎಂದು ಆರೋಪಿಸಿದರು.