Tuesday, November 18, 2025

ತುಮಕೂರಿಗೆ ಮೆಟ್ರೋ ವಿಸ್ತರಣೆಯಾದರೆ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗುತ್ತೆ: ಸಚಿವ ಡಾ. ಜಿ.ಪರಮೇಶ್ವರ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಿಂದ ತುಮಕೂರಿಗೆ ನಮ್ಮ ಮೆಟ್ರೋ ರೈಲು ಯೋಜನೆಗೆ ಬಿಎಂಆರ್‌ಸಿಎಲ್‌ ವಿವರವಾದ ಯೋಜನಾ ವರದಿ (DPR) ಸಿದ್ಧಪಡಿಸಲು ಟೆಂಡರ್‌ ಆಹ್ವಾನಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ,ಪ್ರತಿನಿತ್ಯ ತುಮಕೂರಿನಿಂದ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ನೆಲಮಂಗಲ, ದಾಬಸ್‌ಪೇಟೆ, ಕ್ಯಾತ್ಸಂದ್ರ ಭಾಗ ವೇಗವಾಗಿ ಬೆಳೆಯುತ್ತಿವೆ. ಕೈಗಾರಿಕೆ ಉದ್ದೇಶದಿಂದ ಜನರ ಜೀವನ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಒತ್ತಡ ಜಾಸ್ತಿ ಇದೆ. ನೀರಿಗೆ ಕಷ್ಟ, ಓಡಾಡೋಕೆ ಟ್ರಾಫಿಕ್ ಸಮಸ್ಯೆ ಇದೆಲ್ಲ ನೋಡಿಕೊಂಡು ಆ ಕಡೆ ಜೀವನ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ಯೋಜನೆಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರೋಧ ವ್ಯಕ್ತಪಡಿಸಿದ್ದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಗೃಹ ಸಚಿವ ಪರಮೇಶ್ವರ್‌ ಅವರು, ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಅನೇಕ ವಿಚಾರಗಳು ಸಂಸದ ತೇಜಸ್ವಿಸೂರ್ಯ ಅವರ ಗಮನದಲ್ಲಿಲ್ಲ. ಇದೇ ಕಾರಣದಿಂದ ಯೋಜನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ ಎಂದರು.

ತುಮಕೂರಿನಲ್ಲಿ 20 ಸಾವಿರ ಎಕರೆಯಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಿಸಲಾಗಿದೆ. ಈಗಾಗಲೇ 200 ಕೈಗಾರಿಕೆಗಳು ಬಂದಿವೆ. ಫುಡ್‌ಪಾರ್ಕ್, ಟೈಮೆಕ್ ಜಪಾನೀಸ್ ಫ್ಯಾಕ್ಟರಿ, ಜಪಾನೀಸ್ ಟೌನ್‌ಶಿಪ್‌ಗೆ ಜಾಗ ಕೊಟ್ಟಿದ್ದೇವೆ. ಇಷ್ಟು ವೇಗವಾಗಿ ಬೆಳೆಯುತ್ತಿರುವಾಗ ಸಂಪರ್ಕ (ಕನೆಕ್ಟಿವಿಟಿ) ವ್ಯವಸ್ಥೆ ಬೇಕಲ್ಲವೇ , ರಸ್ತೆ, ಮೆಟ್ರೋ, ರೈಲು ಸಂಪರ್ಕ ಇದ್ದರೆ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಎಂಬುದು ಉದ್ದೇಶ. ರಾಮನಗರ, ಕೋಲಾರ, ತುಮಕೂರು ನಗರಗಳನ್ನು ಬೆಳೆಸಿದರೆ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಎಂದು ಹೇಳಿದ್ದಾರೆ.

ಎರಡು ವರ್ಷದ ಹಿಂದೆಯೇ ತುಮಕೂರಿಗೆ ಮೆಟ್ರೋ ಯೋಜನೆ ತೆಗೆದುಕೊಂಡು ಹೋಗಬೇಕು ಎಂದು ಪ್ರಸ್ತಾಪ ಮಾಡಿದ್ದೆ. ಮುಖ್ಯಮಂತ್ರಿಗಳು ಫಿಸಿಬಲಿಟಿ ಸ್ಟಡಿ ಮಾಡುವುದಾಗಿ 2024ರ ಬಜೆಟ್‌ನಲ್ಲಿ ಘೋಷಿಸಿದ್ದರು. ಫಿಸಿಬಲಿಟಿ ವರದಿಯಲ್ಲಿ ತುಮಕೂರು ಮೆಟ್ರೋ ಯೋಜನೆ ಬಗ್ಗೆ ಪಾಸಿಟಿವ್ ಆಗಿ ಕೊಟ್ಟಿದ್ದಾರೆ. ಎಲ್ಲರೊಂದಿಗೆ ಚರ್ಚೆ ಮಾಡಿ ಡಿಪಿಆರ್ ಮಾಡಲು ಅನುಮತಿ ಕೊಟ್ಟಿದ್ದಾರೆ ಎಂದು ಪರಮೇಶ್ವರ್‌ ಹೇಳಿದ್ದಾರೆ.

ಎರಡು-ಮೂರು ಕಂಪನಿಗಳು ಪಿಪಿಪಿ ಮಾದರಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿವೆ. ಹೂಡಿಕೆ ಮಾಡಲು ಸಿದ್ಧರಿದ್ದೇವೆ ಎಂಬುದಾಗಿ ಕತಾರ್ ಮೂಲದ ಕಂಪನಿಯವರು ಮುಖ್ಯಮಂತ್ರಿಯವರಿಗೆ ಅಧಿಕೃತವಾಗಿ ಪತ್ರ ನೀಡಿದ್ದಾರೆ. ಇಷ್ಟೆಲ್ಲ ಆಗಿರುವಾಗ, ಸಂಸದ ತೇಜಸ್ವಿ ಸೂರ್ಯ ಏನು ಅರಿಯದೆ, ಯಾವ ಉದ್ದೇಶಕ್ಕಾಗಿ ಆ ರೀತಿಯಾಗಿ ಮಾತನಾಡಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ‌. ಈ ಬಗ್ಗೆ ನಾನು ಅವರೊಂದಿಗೆ ಮಾತಾಡುತ್ತೇನೆ‌. ಇದು ಸಂಘರ್ಷದ ಪ್ರಶ್ನೆಯಲ್ಲ. ‘ನಮಗೆ ಬೇಕು, ನಿಮಗೆ ಬೇಡ. ನಮಗೆ ಬೇಡ, ನಿಮಗೆ ಬೇಕು’ ಎಂಬ ಪ್ರಶ್ನೆಯೂ ಅಲ್ಲ. ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ನಾವು ಯೋಚನೆ ಮಾಡಬೇಕು‌ ಎಂದು ಹೇಳಿದ್ದಾರೆ.

error: Content is protected !!