ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ‘ಬೌದ್ಧಿಕ ಸತ್ವ’ ಪರೀಕ್ಷೆ ಇಂದಿನಿಂದ ಆರಂಭವಾಗುತ್ತಿದೆ. ಇಲಾಖೆಯು ಪರೀಕ್ಷೆಯನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಅಕ್ರಮಗಳಿಗೆ ಎಡೆಮಾಡಿಕೊಡದಂತೆ ಬಿಗಿ ಭದ್ರತೆ ಕೈಗೊಂಡಿದೆ.
7,10,363 ಅಭ್ಯರ್ಥಿಗಳು ಈ ಬಾರಿ ಪರೀಕ್ಷಾ ಕಣದಲ್ಲಿದ್ದಾರೆ. ರಾಜ್ಯಾದ್ಯಂತ ಒಟ್ಟು 1,217 ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಇಂದಿನಿಂದ ಮಾರ್ಚ್ 17 ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಪ್ರತಿದಿನ ಬೆಳಗ್ಗೆ 10:00 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಸಮಯ ನಿಗದಿಪಡಿಸಲಾಗಿದೆ.
ಮೊದಲ ದಿನವೇ ಭಾಷಾ ವಿಷಯಗಳಾದ ಕನ್ನಡ ಮತ್ತು ಅರೇಬಿಕ್ ಪರೀಕ್ಷೆಗಳು ಜರುಗಲಿವೆ.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ‘X’ ಮೂಲಕ ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬಿದ್ದಾರೆ. “ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ. ನೀವು ಗಳಿಸುವ ಅಂಕಗಳು ನಿಮ್ಮ ಉಜ್ವಲ ಭವಿಷ್ಯಕ್ಕೆ ಅಡಿಪಾಯವಾಗಲಿ,” ಎಂದು ಅವರು ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ.



