ಹೊಸದಿಗಂತ ವರದಿ,ಕೊಡಗು:
ರೈತರ ವಿರುದ್ಧ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಕ್ರಮವನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕದ ನೇತೃತ್ವದಲ್ಲಿ ದಕ್ಷಿಣ ಕೊಡಗಿನ ಹುದಿಕೇರಿಯಲ್ಲಿ ಪ್ರತಿಭಟನೆ ನಡೆಯಿತು.
ಜಿಲ್ಲಾ ರೈತ ಸಂಘದ ಅಧ್ಯಕ್ಷ ಮನು ಸೋಮಯ್ಯ ನೇತೃತ್ವದಲ್ಲಿ ನೂರಾರು ರೈತರು ಹುದಿಕೇರಿ ಮುಖ್ಯ ರಸ್ತೆಯಲ್ಲಿ ಘೋಷಣೆಗಳ ಸಹಿತ ಪ್ರತಿಭಟನಾ ಮೆರವಣಿಗೆ ನಡೆಸಿ, ಹುದಿಕೇರಿ ಪೊಲೀಸ್ ಉಪಠಾಣೆಯ ಎದುರು ಪ್ರತಿಭಟನೆ ನಡೆಸುವ ಮೂಲಕ ಮೊಕದ್ದಮೆ ವಾಪಾಸ್ ಪಡೆಯಲು ಒತ್ತಾಯಿಸಿದರು.
ಪೊನ್ನಂಪೇಟೆ ತಾಲೂಕು ಹೈಸೊಡ್ಲೂರು ಗ್ರಾಮದಲ್ಲಿ ಕಾಫಿ ಕೊಯ್ಲು ನಡೆಯುತ್ತಿದ್ದ ಸಂದರ್ಭ ಕೆಲವರು ತೋಟದ ಬೇಲಿಯನ್ನು ಕಿತ್ತು ಹಾಕಿದ್ದು, ಈ ಬಗ್ಗೆ ದೂರು ನೀಡಲು ತೆರಳುವ ಸಂದರ್ಭ ತೋಟದ ಮಾಲಕರನ್ನು ಅಡ್ಡಗಟ್ಟಲಾಗಿದೆ. ಅನ್ಯಾಯಕ್ಕೆ ಒಳಗಾದ ರೈತರ ವಿರುದ್ಧವೇ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾ ರೈತ ಸಂಘದ ಅಧ್ಯಕ್ಷ ಮನು ಮಾತನಾಡಿ, ರೈತರ ಮೇಲೆ ಹೂಡಲಾಗಿರುವ ಮೊಕದ್ದಮೆಗಳನ್ನು ತಕ್ಷಣ ವಾಪಾಸ್ಸು ಪಡೆಯಬೇಕು ಮತ್ತು ದೌರ್ಜನ್ಯ ಕಾಯ್ದೆ ದುರುಪಯೋಗದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಹುದಿಕೇರಿ ವ್ಯಾಪ್ತಿಯ ನೂರಾರು ಬೆಳೆಗಾರರು ಪಾಲ್ಗೊಂಡಿದ್ದರು.