ಹೊಸದಿಗಂತ ವರದಿ ಮಂಗಳೂರು:
ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಯಕ್ಷರಂಗದಲ್ಲಿ ಮೆರೆದ ಖ್ಯಾತ ಯಕ್ಷ ಕಲಾವಿದ, ಅರ್ಥಧಾರಿ, ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ಅವರು ಬುಧವಾರ ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.
ಧರ್ಮಸ್ಥಳ ಮೇಳದಲ್ಲಿ ನಾಲ್ಕು ನಾಲ್ಕು ದಶಕಗಳ ಕಾಲ ಕೃಷ್ಣನಾಗಿ, ಭರತನಾಗಿ ಮೆರೆದ ಸುಂದರರಾಯರು ಯಕ್ಷ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು. ಬಳಿಕ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಜನಮನ್ನಣೆ ಪಡೆದಿದ್ದರು.
ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ನೇ ಮಾರ್ಚ್ 20ರಲ್ಲಿ ಕೇರಳ ರಾಜ್ಯದ ಕುಂಬಳೆಯಲ್ಲಿ ಜನಿಸಿದ ಕುಂಬ್ಳೆ ಸುಂದರ್ ರಾವ್ ಅವರು ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕಾರ್ಯನಿರ್ವಹಿಸಿದ್ದರು, ಅಲ್ಲದೆ 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು.
ಯಕ್ಷಗಾನ ಕಲಾವಿದರೊಬ್ಬರು ನೇರವಾಗಿ ಮತದಾರರಿಂದಲೇ ಆರಿಸಲ್ಪಟ್ಟ ಪ್ರಪ್ರಥಮ ಶಾಸಕರೆಂಬ ಹೆಗ್ಗಳಿಕೆಗೂ ಕುಂಬಳೆ ಸುಂದರ್ ರಾವ್ ಪಾತ್ರರಾಗಿದ್ದರು. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಸುಂದರ್ ರಾವ್ ಅವರು ಪತ್ನಿ ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ಗುರುವಾರ ನೆರವೇರಲಿದೆ.