March 16, 2026
Monday, March 16, 2026
spot_img

ನಿಯಂತ್ರಣ ತಪ್ಪಿದ ಈರುಳ್ಳಿ ಲಾರಿ ಪಲ್ಟಿಯಾಗಿ ಭೀಕರ ಅಪಘಾತ: ಓರ್ವ ಸಾ*ವು, ಇಬ್ಬರಿಗೆ ಗಾಯ

ಹೊಸದಿಗಂತ ಬೆಳಗಾವಿ:

ಹಿರೇಬಾಗೇವಾಡಿ ಸಮೀಪದ ಬಡಿಕೊಳ್ಳುಮಠ ಘಾಟ್‌ನಲ್ಲಿ ಈರುಳ್ಳಿ ತುಂಬಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಭೀಕರ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಈರುಳ್ಳಿ ಚೀಲಗಳನ್ನು ತುಂಬಿಕೊಂಡು ವೇಗವಾಗಿ ಚಲಿಸುತ್ತಿದ್ದ ಲಾರಿಯು ಘಾಟ್ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದೆ. ಮೃತನ ಗುರುತು ಇನ್ನು ಪತ್ತೆಯಾಗಿಲ್ಲ. ಗಾಯಾಳುಗಳನ್ನು ತಕ್ಷಣವೇ ಬೆಳಗಾವಿಯ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೇವಲ ಒಂದು ಲಾರಿಯಲ್ಲದೆ, ಇದೇ ಘಾಟ್‌ನಲ್ಲಿ ಒಟ್ಟು ಮೂರು ಲಾರಿಗಳು ಪಲ್ಟಿಯಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಭಾರೀ ಅಡ್ಡಿಯುಂಟಾಗಿತ್ತು.

ವಿಷಯ ತಿಳಿಯುತ್ತಿದ್ದಂತೆಯೇ ಹಿರೇಬಾಗೇವಾಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತನ ಹಿನ್ನೆಲೆ ಮತ್ತು ಮೂಲ ಸ್ಥಳದ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಅಲ್ಲದೆ, ರಸ್ತೆಯಲ್ಲಿದ್ದ ಅವಶೇಷಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಲು ಕ್ರಮ ಕೈಗೊಂಡಿದ್ದಾರೆ.

ಬಡಿಕೊಳ್ಳುಮಠ ಘಾಟ್ ಇತ್ತೀಚಿನ ದಿನಗಳಲ್ಲಿ ಸರಣಿ ಅಪಘಾತಗಳ ತಾಣವಾಗಿ ಮಾರ್ಪಡುತ್ತಿರುವುದಕ್ಕೆ ಸ್ಥಳೀಯರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಈ ರಸ್ತೆಯಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದರೂ ಸೂಕ್ತ ಮುನ್ನೆಚ್ಚರಿಕೆ ವಹಿಸದಿರುವುದೇ ಇದಕ್ಕೆ ಕಾರಣ ಎಂದು ಜನರು ದೂರಿದ್ದಾರೆ. ತಕ್ಷಣವೇ ರಸ್ತೆ ವಿನ್ಯಾಸ ಬದಲಾವಣೆ ಅಥವಾ ಪರ್ಯಾಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ಹಾಗೂ ರಾಜ್ಯ ರಸ್ತೆ ಸಾರಿಗೆ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಸಿಬ್ಬಂದಿಯೊಂದಿಗೆ ಸೇರಿ ಅಪಘಾತ ತಡೆಗೆ ಗಂಭೀರ ಚಿಂತನೆ ನಡೆಸಿದೆ. ಮುಂದಿನ ಅನಾಹುತಗಳನ್ನು ತಪ್ಪಿಸಲು ರಸ್ತೆಯ ಮೇಲಿದ್ದ ಕಲ್ಲು-ಮಣ್ಣು ಹಾಗೂ ಈರುಳ್ಳಿ ರಾಶಿಯನ್ನು ಗುಡಿಸಿ ಸ್ವಚ್ಛಗೊಳಿಸುವ ಮೂಲಕ ಮುನ್ನೆಚ್ಚರಿಕೆ ವಹಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !