February 7, 2026
Saturday, February 7, 2026
spot_img

ಮಂಜು ಮಡುಗಟ್ಟಿದ ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಮೊರಾದಾಬಾದ್–ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ದಟ್ಟ ಮಂಜಿನ ಕಾರಣ ಟ್ರಕ್‌ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ.

ಬಹಜೋಯ್ ಪೊಲೀಸ್ ಠಾಣೆ ವ್ಯಾಪ್ತಿಯ ಖಜ್ರಾ ಗ್ರಾಮದ ಸಮೀಪ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರಿಗೆ ವೇಗವಾಗಿ ಬಂದ ಐಷರ್ ಕಂಟೇನರ್ ಟ್ರಕ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಛಿದ್ರಗೊಂಡಿದ್ದು, ಸವಾರರು ರಸ್ತೆಗೆ ಎಸೆಯಲ್ಪಟ್ಟರು. ನಂತರ ಟ್ರಕ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಕಮಲಪುರ ಗ್ರಾಮದ ನಿವಾಸಿಗಳಾದ ಸುರೇಶ್ (35), ಅವರ ಪತ್ನಿ ವಿಮ್ಲೇಶ್ (30), ಪುತ್ರ ಪ್ರತೀಕ್ (15) ಹಾಗೂ ಸಂಜಯ್ (40) ಎಂದು ಗುರುತಿಸಲಾಗಿದೆ. ಇವರಲ್ಲಿ ಮೂವರು ಒಂದೇ ಕುಟುಂಬದವರು ಎಂದು ತಿಳಿದುಬಂದಿದೆ. ನಾಲ್ವರೂ ಬಹಜೋಯ್‌ನಿಂದ ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದರು ಎನ್ನಲಾಗಿದೆ.

ಅಪಘಾತದ ವೇಳೆಗೆ ಹೆದ್ದಾರಿಯಲ್ಲಿ ದಟ್ಟ ಮಂಜು ಆವರಿಸಿಕೊಂಡಿದ್ದು, ಗೋಚರತೆ ಅತ್ಯಂತ ಕಡಿಮೆಯಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ. ಟ್ರಕ್ ಚಾಲಕ ಗಾಯಗೊಂಡು ವಾಹನದೊಳಗೆ ಸಿಲುಕಿದ್ದನ್ನು ಪೊಲೀಸರು ಹಾಗೂ ಸ್ಥಳೀಯರ ಸಹಾಯದಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಲ್ಲ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ನಡೆಯುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !