ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿ ವಜಾಗೊಂಡ ಶಾಕ್ ಅಲ್ಲಿರುವ ಭವಾನಿ ರೇವಣ್ಣಗೆ ಮತ್ತೊಂದು ಶಾಕ್ ಎದುರಾಗಿದ್ದು, ಭವಾನಿ ರೇವಣ್ಣ ಅವರ ಕಾರು ಚಾಲಕನನ್ನು ಎಸ್ಐಟಿ ಅಧಿಕಾರಿಗಳು ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಗಳೂರು ನಗರದ ಕಲ್ಯಾಣ ನಗರದಲ್ಲಿ ವಶಕ್ಕೆ ಪಡೆದಿದ್ದು, ಆತನಿಂದ ಅಗತ್ಯ ಮಾಹಿತಿಯನ್ನು ಅಧಿಕಾರಿಗಳು ಕಲೆಹಾಕುತ್ತಿದ್ದಾರೆ.
ಕಿಡ್ನ್ಯಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರನ್ನು ಬಂಧಿಸಲು ಎಸ್ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಹೀಗಾಗಿ ಚಾಲಕನನ್ನು ವಶಕ್ಕೆ ಪಡೆದು ಭವಾನಿ ರೇವಣ್ಣ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಅಜಿತ್ ವಶಕ್ಕೆ ಪಡೆದಿರುವ ಚಾಲಕ. ನಾಲ್ಕೈದು ದಿನದ ಹಿಂದೆ ಅತ್ತೆ ಮನೆಗೆ ಬಂದಿದ್ದ ಅಜಿತ್ನನ್ನು ಇಲ್ಲಿನ ಕಲ್ಯಾಣ ನಗರದಲ್ಲಿ ವಶಕ್ಕೆ ಪಡೆಯಲಾಗಿದೆ.
ಮೇ 4 ರಂದು ಸಂತ್ರಸ್ತೆಯರ ಸ್ಥಳ ಮಹಜರಿನ ವೇಳೆ ಹೊಳೆನರಸೀಪುರ ಮನೆಯಲ್ಲಿ ಭವಾನಿ ಹಾಜರಿದ್ದರು. ಆ ನಂತರ ಮೇ 6 ರಂದು ಹೊಳೆನರಸೀಪುರದ ಮನೆಯಲ್ಲಿ ಜೆಡಿಎಸ್ ಶಾಸಕರು ಹಾಗೂ ಮಾಜಿ ಶಾಸಕರನ್ನು ಭೇಟಿಯಾದ ನಂತರ ಹೊಳೆನರಸೀಪುರ ಮನೆಯಿಂದ ಹೋದವರು ಇದುವರೆಗೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಅಜ್ಞಾತದಲ್ಲಿರುವ ಅವರಿಗಾಗಿ ಎಸ್ಐಟಿ ಹುಡುಕಾಟ ನಡೆಸುತ್ತಿದೆ.