ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ಮುಖ್ಯಮಂತ್ರಿ ಆಯ್ಕೆ ವಿಚಾರ ಕಾಂಗ್ರೆಸ್ ಪಕ್ಷದೊಳಗೆ ತೀವ್ರ ಚರ್ಚೆಗೆ ಕಾರಣವಾಗಿದ್ದು, ಅಂತಿಮ ನಿರ್ಧಾರಕ್ಕಾಗಿ ರಾಜ್ಯ ನಾಯಕರು ದೆಹಲಿಯತ್ತ ಮುಖ ಮಾಡಿದ್ದಾರೆ.
ನಾಯಕತ್ವದ ಆಯ್ಕೆ ಕುರಿತು ಪಕ್ಷದೊಳಗಿನ ಚಟುವಟಿಕೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಕೆಪಿಸಿಸಿ ಮಾಜಿ ಅಧ್ಯಕ್ಷ ಕೆ. ಸುಧಾಕರನ್ ಸೇರಿದಂತೆ ಹಲವು ಹಿರಿಯ ನಾಯಕರು ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಮಾತುಕತೆ ನಡೆಸಲು ರಾಷ್ಟ್ರ ರಾಜಧಾನಿಗೆ ತೆರಳಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಕೆ. ಸುಧಾಕರನ್, ಸಂತೋಷದಿಂದ ಮರಳುತ್ತೇನೆ ಎಂದು ಹೇಳುವ ಮೂಲಕ ಕುತೂಹಲ ಹೆಚ್ಚಿಸಿದರು. ಆದರೆ ಮುಖ್ಯಮಂತ್ರಿ ಆಯ್ಕೆ ಕುರಿತು ನೇರವಾಗಿ ಯಾವುದೇ ಮಾಹಿತಿ ನೀಡಲು ಅವರು ನಿರಾಕರಿಸಿದರು.
ಇದನ್ನೂ ಓದಿ:
ಇದೇ ವೇಳೆ ಕಾಂಗ್ರೆಸ್ ನಾಯಕ ಕೆ. ಮುರಳೀಧರನ್, ಮುಂದಿನ 48 ಗಂಟೆಗಳಲ್ಲಿ ಹೊಸ ಮುಖ್ಯಮಂತ್ರಿ ಕುರಿತು ಅಂತಿಮ ತೀರ್ಮಾನ ಹೊರಬೀಳಲಿದೆ ಎಂದು ತಿಳಿಸಿದ್ದಾರೆ. ಹೊಸ ಪೀಳಿಗೆಯ ನಾಯಕತ್ವಕ್ಕೆ ಅವಕಾಶ ನೀಡುವ ಚರ್ಚೆ ನಡೆಯುತ್ತಿರುವುದರಿಂದ ಸಹಜವಾಗಿಯೇ ಹಲವು ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ ಎಂದರು.
ಇನ್ನೊಂದೆಡೆ, ಬಿಜೆಪಿ ಶಾಸಕ ವಿ. ಮುರಳೀಧರನ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಾರ್ವಜನಿಕ ಹಿತಕ್ಕಿಂತ ಅಧಿಕಾರ ರಾಜಕಾರಣಕ್ಕೆ ಪಕ್ಷ ಹೆಚ್ಚು ಆದ್ಯತೆ ನೀಡುತ್ತಿದೆ ಎಂದು ಟೀಕಿಸಿದ್ದಾರೆ.



