June 7, 2026
Sunday, June 7, 2026
spot_img

ದೆಹಲಿ ತಲುಪಿದ ಸಚಿವ ಸ್ಥಾನದ ಫೈಟ್: ಕೆ.ಸಿ. ವೇಣುಗೋಪಾಲ್ ಭೇಟಿಗೆ ಮುಂದಾದ ಜಮೀರ್ ಅಹ್ಮದ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ 13 ಸಚಿವರ ಪೈಕಿ ಹಲವರು ತಮಗೆ ಹಂಚಿಕೆ ಮಾಡಲಾಗಿರುವ ಖಾತೆಗಳ ಬಗ್ಗೆ ಅಸಮಾಧಾನಗೊಂಡಿದ್ದು, ಆರಂಭಿಕ ಬಿಕ್ಕಟ್ಟಿನಿಂದ ಸರ್ಕಾರ ಇನ್ನು ಹೊರಬರುತ್ತಿರುವಾಗಲೇ, ಸಚಿವ ಸಂಪುಟ ಸೇರಲು ಬಯಸಿರುವ ಶಾಸಕರು ಒತ್ತಡದ ತಂತ್ರಗಳಿಗೆ ಮೊರೆ ಹೋಗಲಾರಂಭಿಸಿದ್ದಾರೆ.

ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಬೆಂಬಲಿಗರು ಶನಿವಾರ ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಸಿದರು. ಜಮೀರ್ ವಿಧಾನಸಭೆಯಲ್ಲಿ ಚಾಮರಾಜಪೇಟೆ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ.

ಆದರೆ, ಪೊಲೀಸರು ಪ್ರತಿಭಟನಾಕಾರರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದರು. ಚಿತ್ರದುರ್ಗ ಮತ್ತು ರಾಯಚೂರಿನಂತಹ ಸ್ಥಳಗಳಲ್ಲೂ ಜಮೀರ್ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಇತ್ತೀಚಿನ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಜಮೀರ್ ಕೊಡುಗೆಯಿಂದ ಕಾಂಗ್ರೆಸ್ ಹೈಕಮಾಂಡ್ ಲಾಭ ಪಡೆದ ನಂತರವೂ ಅವರಿಗೆ ಅನ್ಯಾಯ ಮಾಡಿದೆ ಎಂದು ಬೆಂಬಲಿಗರು ಆರೋಪಿಸಿದ್ದಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಜಮೀರ್ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಹಲವು ಕಾಂಗ್ರೆಸ್ ನಾಯಕರು ಆರೋಪಿಸಿದ ಹಿನ್ನೆಲೆಯಲ್ಲಿ ಅವರಿಗೆ ಸಚಿವ ಸ್ಥಾನ ನಿರಾಕರಿಸಲಾಗಿತ್ತು. ಅಲ್ಲದೆ, ಮತದಾರರು ಎಸ್‌ಡಿಪಿಐ ಅಥವಾ ಪಕ್ಷೇತರರಿಗೆ ಮತ ಹಾಕಬೇಕು ಎಂದು ಜಮೀರ್ ಹೇಳಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್ ವೈರಲ್ ಆಗಿತ್ತು.

ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಸಚಿವ ಸ್ಥಾನಕ್ಕೆ ಹಕ್ಕು ಮಂಡಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ನ್ನು ಭೇಟಿ ಮಾಡಲು ಜಮೀರ್ ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ:

ಇದೇ ವೇಳೆ, ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಮೂರು ಬಾರಿಯ ಶಾಸಕ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ್ ಬೆಂಬಲಿಗರು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಆದರೆ, ಈ ಪ್ರತಿಭಟನೆ ಸ್ವಯಂಪ್ರೇರಿತವಾಗಿ ನಡೆದಿದೆ ಎಂದು ಅಬ್ಬಯ್ಯ ಪ್ರಸಾದ್ ಸಮರ್ಥಿಸಿಕೊಂಡಿದ್ದಾರೆ.

ವಿಧಾನಸಭೆಯ ಮಾಜಿ ಉಪಸಭಾಪತಿ ರುದ್ರಪ್ಪ ಲಮಾಣಿ ಮತ್ತು ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ಕೂಡ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮ್ಯನವರು ನಮಗೆ ಸಚಿವ ಸ್ಥಾನದ ಭರವಸೆ ನೀಡಿದ್ದರು ಎಂದು ಹೇಳಿದ್ದಾರೆ. ಮತ್ತೊಂದೆಡೆ, ಬಳ್ಳಾರಿ ಸಂಸದ ಇ. ತುಕಾರಾಂ ಸಂಡೂರು (ಎಸ್ಟಿ) ಕ್ಷೇತ್ರವನ್ನು ಪ್ರತಿನಿಧಿಸುವ ತಮ್ಮ ಪತ್ನಿ ಅನ್ನಪೂರ್ಣಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.

ಕರ್ನಾಟಕದಿಂದ ನಾಲ್ಕು ರಾಜ್ಯಸಭಾ ಮತ್ತು ಏಳು ವಿಧಾನಪರಿಷತ್ (MLC) ಸ್ಥಾನಗಳಿಗೆ ಜೂನ್ 18 ರಂದು ನಡೆಯಲಿರುವ ಚುನಾವಣೆಯ ನಂತರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಶಿವರಾಜ್ ತಂಗಡಗಿ, ಅಶೋಕ್ ಪಟ್ಟಣ್, ಅಪ್ಪಾಜಿ ಸಿ.ಎಸ್. ನಾಡಗೌಡ, ಎಸ್.ಎನ್. ನಾರಾಯಣಸ್ವಾಮಿ, ಎ.ಆರ್. ಕೃಷ್ಣಮೂರ್ತಿ ಮತ್ತು ಪಿ.ಎಂ. ನರೇಂದ್ರಸ್ವಾಮಿ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಭಾರಿ ಲಾಬಿ ನಡೆಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !