ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೋಲ್ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಯುವಕರ ನಡುವೆ ಗಲಾಟೆ ನಡೆದಿದ್ದು, ಈ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಪ್ಲಾಜಾ ಬಳಿ ಟೋಲ್ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಕಾರಿನಲ್ಲಿ ಬಂದಿದ್ದ ಯುವಕರ ನಡುವೆ ಗಲಾಟೆ ನಡೆದಿತ್ತು. ಇದನ್ನೇ ಮನಸಿನಲ್ಲಿಟ್ಟುಕೊಂಡಿದ್ದ ಯುವಕರು ಟೋಲ್ನಲ್ಲಿ ಕೆಲಸ ಮಾಡ್ತಿದ್ದ ಪವನ್ಕುಮಾರ್(26) ಅನ್ನು ಹತ್ಯೆ ಮಾಡಿದ್ದಾರೆ.
ಬೆಂಗಳೂರು ದಕ್ಷಿಣ ತಾಲೂಕಿನ ಕರಿಕಲ್ ತಾಂಡ್ಯ ನಿವಾಸಿ ಪವನ್ಕುಮಾರ್ ಕೆಲಸ ಮುಗಿಸಿ ಊಟಕ್ಕೆ ಹೋಗುತ್ತಿದ್ದಾಗ ಆತನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.
ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಟೋಲ್ ಬಳಿ ಗಲಾಟೆ ನಡೆದಿತ್ತು. ಬಳಿಕ ರಾತ್ರಿ 12 ಗಂಟೆಗೆ ಕೆಲಸ ಮುಗಿಸಿಕೊಂಡು ಊಟಕ್ಕೆಂದು ಪವನ್ ಹೊರಟ್ಟಿದ್ದ. ಈ ವೇಳೆ ಪವನ್ನನ್ನು ಹಿಂಬಾಲಿಸಿದ ಯುವಕರು ಆತನ ಮೇಲೆ ಹಾಕಿ ಸ್ಟಿಕ್ನಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಬಂದು ಪರೀಶಿಲಿಸಿದ್ದಾರೆ. ಮೃತ ದೇಹವನ್ನು ಬೆಂಗಳೂರು ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.