ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಡಿಎಂಕೆ ಸರ್ಕಾರದ ಸಚಿವ ಕೆ. ಪೊನ್ಮುಡಿ ವಿರುದ್ಧ ಎಫ್ಐಆರ್ ದಾಖಲಿಸದ ತಮಿಳುನಾಡು ಪೊಲೀಸರ ವಿರುದ್ಧ ಮದ್ರಾಸ್ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಈ ವೇಳೆ ಸಚಿವ ಪೊನ್ಮುಡಿ ವಿರುದ್ಧ ಎಫ್ಐಆರ್ ಹಾಕಿ ಅಥವಾ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸಲು ಸಿದ್ಧರಾಗಿ ಎಂದು ತಮಿಳುನಾಡು ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಖಡಕ್ ವಾರ್ನಿಂಗ್ ನೀಡಿದೆ.
ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಪೊನ್ಮುಡಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ನಾಯಕರು ಆಗ್ರಹಿಸಿದ ನಂತರ ಮದ್ರಾಸ್ ಹೈಕೋರ್ಟ್ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದೆ.
ಕೋರ್ಟ್ ಸ್ವಯಂಪ್ರೇರಿತವಾಗಿ ಈ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಂಡಿದೆ. ಹೀಗಾಗಿ ಈ ವಿಚಾರದ ಬಗ್ಗೆ ನಿಮಗೆ ಯಾವುದೇ ದೂರುಗಳು ಬಾರದೇ ಹೋದರು ಕೂಡ ಈ ಬಗ್ಗೆ ಕೇಸ್ ದಾಖಲಿಸಿ ವಿಚಾರಣೆ ನಡೆಸಿ ಎಂದು ಮದ್ರಾಸ್ ಹೈಕೋರ್ಟ್ ತಮಿಳುನಾಡು ಪೊಲೀಸರಿಗೆ ಸೂಚಿಸಿದೆ. ಅಲ್ಲದೇ ವಿಚಾರಣೆಯನ್ನು ಏಪ್ರಿಲ್ 23ಕ್ಕೆ ಮುಂದೂಡಿಕೆ ಮಾಡಿದೆ.
ಏಪ್ರಿಲ್ 6 ರಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ತಮಿಳುನಾಡು ಅರಣ್ಯ ಸಚಿವ ಕೆ. ಪೊನ್ಮುಡಿ ಮಹಿಳೆಯರು, ಶೈವರು ಹಾಗೂ ವೈಷ್ಣವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಬಗ್ಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿವಾದಾತ್ಮಕ ಹೇಳಿಕೆಯ ನಂತರ ಡಿಎಂಕೆ ಅವರಿಗೆ ಪಕ್ಷದಲ್ಲಿ ನೀಡಿದ್ದ ಉಪ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಅವರನ್ನು ತೆಗೆದು ಹಾಕಿತ್ತು. ಆದರೆ ಸಚಿವ ಸ್ಥಾನದಲ್ಲಿ ಉಳಿಸಿಕೊಂಡಿತ್ತು.