ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ವುಟ್ ನಟ, ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಮಾತನಾಡುವಾಗ ಹೇಳಿದ ‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಎಂಬ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಒಂದು ಜಾತಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಸಮಾಜ ಕಲ್ಯಾಣ ಇಲಾಖೆಯಿಂದ ನಟ ಉಪೇಂದ್ರನ ವಿರುದ್ಧ ಬೆಂಗಳೂರಿನ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ನಟ ಉಪೇಂದ್ರ ಅವರ ಹೇಳಿಕೆಯ ಕುರಿತು ರಾಜ್ಯಾದ್ಯಂತ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್ ಅವರು ಬೆಂಗಳೂರಿನ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಿದದಾರೆ.
ಸಾಮಾಜಿಕ ಜಾಲತಾಣದ ಲೈವ್ ಕಾರ್ಯಕ್ರಮದಲ್ಲಿ ಮಾತನಾಡುವಾಗ ‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಪದ ಬಳಸಿದ್ದರು. ಇದಾದ ನಂತರ, ಅವರೇ ಅಪ್ಲೋಡ್ ಮಾಡಿದ್ದ ವೀಡಿಯೋ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದರು. ಆದರೂ, ಅವರ ವಿರುದ್ಧ ಸಾಮಾಜಿಕ ಜಾಲತಾಣ ಸೇರಿ ಭೌತಿಕವಾಗಿ ರಾಮನಗರ ಸೇರಿ ವಿವಿಧೆಡೆ ಪ್ರತಿಭಟನೆ ಕೂಡ ಮಾಡಲಾಗಿದೆ.
ಉಪೇಂದ್ರ ಮಾತನಾಡಿರುವ ಮಾತಿನಿಂದ ದಲಿತ ಸಮಾಜದಲ್ಲಿನ ಜಾತಿ ಭಾವನೆಗೆ ಘಾಸಿ ಉಂಟಾಗಿದೆ. ಆದ್ದರಿಂದ ಉಪೇಂದರ ಅವರ ಮೇಲೆ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಸಮತಾ ಸೈನಿಕ ದಳದ ಮುಖಂಡರು ಪತ್ರಮುಖೇನ ಸಾಮಾಜ ಕಲ್ಯಾಣ ಇಲಾಖೆಗೆ ಪತ್ರವನ್ನು ಬರೆದಿದ್ದಾರೆ. ಇನ್ನು ವಿಡಿಯೋ ಕ್ಲಿಪ್ ಅನ್ನು ನೋಡಲಾಗಿ, ಮನವಿ ಪತ್ರದಲ್ಲಿ ಸತ್ಯಾಂಶ ಇದ್ದುದರಿಂದ ಅವರ ಮೇಲೆ ದೂರು ದಾಖಲಿಸಲಾಗಿದೆ. ಸಾರ್ವಜನಿಕ ಜೀವನದಲ್ಲಿ ನಟನಾಗಿರುವ ಉಪೇಂದ್ರ ಅವರು ರಾಜ್ಯಕ್ಕೆ ಮಾದರಿಯಾಗಬೇಕಿತ್ತು. ಆದರೆ, ಈಗ ಅವರ ಹೇಳಿಕೆಯನ್ನು ಕೆಲವರು ಅನುಕರಣೆ ಮಾಡಿದಲ್ಲಿ ಸಮಾಜದ ಸ್ವಾಸ್ಥ್ಯ ಹಾಳಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ ಜಾತಿನಿಂದನೆ ಆರೋಪದಡಿ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಲಾಗಿದೆ.